Friday, September 20, 2024
Friday, September 20, 2024

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಅವರ ತ್ಯಾಗ ಅವಿಸ್ಮರಣೀಯ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಅವರ ತ್ಯಾಗ ಅವಿಸ್ಮರಣೀಯ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

Date:

ಉಡುಪಿ: ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿಯವರ ತ್ಯಾಗ ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹೇಳಿದರು.

ಅವರು ಇಂದು, ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿ ಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಶಿಸಿ ಹೋಗುತ್ತಿದ್ದ ವಚನ ಸಾಹಿತ್ಯದ ಮೂಲ ಪ್ರತಿಗಳಾದ ಅಮೂಲ್ಯವಾದ ತಾಳೆಗರಿಗಳನ್ನು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ತೆರಳಿ, ಹುಡುಕಿ, ಸಂಗ್ರಹಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅವುಗಳನ್ನು ಗ್ರಂಥ ರೂಪದಲ್ಲಿ ಎಲ್ಲರೂ ಓದಲು ಅನುಕೂಲವಾಗುವಂತೆ ಮುದ್ರಿಸಿದ ಫ.ಗು.ಹಳಕಟ್ಟಿಯವರ ಕಾರ್ಯದಿಂದಾಗಿ ಇಂದು ಅಮೂಲ್ಯ ವಚನ ಭಂಡಾರ ಎಲ್ಲರಿಗೂ ತಲುಪಲು ಸಾಧ್ಯವಾಗಿದೆ.

ವಚನಗಳಲ್ಲಿನ ಮಾನವೀಯ ಮೌಲ್ಯಗಳು, ಸಂದೇಶಗಳು ವಿಶ್ವ ಶಾಂತಿ, ವಿಶ್ವ ಪ್ರೇಮ ಮೂಡಿಸಲಿವೆ. ವಚನ ಸಾಹಿತ್ಯದ ಮೂಲ ಪ್ರತಿಗಳ ಸಂಗ್ರಹಕ್ಕೆ ಮನೆ ಮನೆಗಳಿಗೆ ತೆರಳಿ ಬೇಡಿದ ಅವರ ತ್ಯಾಗ, ಅರ್ಪಣಾ ಮನೋಭಾವ ಮತ್ತು ಅವುಗಳ ಸಂರಕ್ಷಣೆ ಹಾಗೂ ಮುದ್ರಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಕನ್ನಡ ಸಾಹಿತ್ಯಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಅವರನ್ನು ವಚನ ಸಾಹಿತ್ಯದ ಪಿತಾಮಹ ಎಂದು ಗುರುತಿಸಲಾಗುತ್ತಿದ್ದು, ಯುವಜನತೆ ವಚನಗಳನ್ನು ಓದಿ, ಅವುಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.

ಡಾ.ಫ.ಗು.ಹಳಕಟ್ಟಿ ಅವರ ಕುರಿತು ಉಪನ್ಯಾಸ ನೀಡಿದ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ್, ವಚನ ಸಾಹಿತ್ಯದ ಮತ್ತು ವಚನಕಾರರ ಬಗ್ಗೆ ಇಂದು ಅಮೂಲಾಗ್ರವಾಗಿ ತಿಳಿಯಲು ಹಳಕಟ್ಟಿಯವ ಶ್ರಮದಿಂದ ಮಾತ್ರ ಸಾಧ್ಯವಾಗಿದೆ.

ಮನೆಗಳಲ್ಲಿ ಧಾರ್ಮಿಕತೆ ಹೆಸರಿನಲ್ಲಿ ಪೂಜಿಸುತ್ತಿದ್ದ ವಚನ ಸಾಹಿತ್ಯದ ತಾಳೆಗರಿಗಳು, ಮನೆಯ ಅಟ್ಟದ ಮೇಲೆ ದೂಳು ಹಿಡಿದ್ದಿದ್ದ, ಹುಳುಗಳು ತಿಂದಿದ್ದ, ಅರ್ಧಂಬದ್ದ ನಾಶವಾಗಿದ್ದ ವಚನಗಳ ಮೂಲ ಪ್ರತಿಗಳನ್ನು ಸಂಬಂಧಪಟ್ಟ ಮನೆಯವರ ಮನವೊಲಿಸಿ, ಬೇಡಿ, ಕೆಲವೊಮ್ಮೆ ಹಣ ನೀಡಿ ಅವುಗಳನ್ನು ಸಂಗ್ರಹಿಸಿ, ಅವುಗಳನ್ನು ಅಧ್ಯಯನ ಮಾಡಿ, ಗ್ರಂಥ ರೂಪದಲ್ಲಿ ಪ್ರಕಟಿಸಿ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಸಾಧನೆ ಮಾಡುವುದು ಮಾತ್ರವಲ್ಲದೇ ಸುಮಾರು 250 ಕ್ಕೂ ಹೆಚ್ಚು ಹೊಸ ವಚನಕಾರರು ಮತ್ತು ಅವರ ವಚನಗಳನ್ನು ಗುರುತಿಸಿದ್ದಾರೆ ಎಂದರು.

ತಾವು ಸಂಗ್ರಹಿಸಿದ ವಚನಗಳ ಮುದ್ರಣಕ್ಕೆ, ಮುದ್ರಣಾಲಯ ಆರಂಭಿಸಲು, ತಮ್ಮ ಸ್ವಂತ ಮನೆಯನ್ನೇ ಮಾರಾಟ ಮಾಡಿ, ಜೀವನದ ಕೊನೆಯವರೆಗೂ ಬಡತನ, ಅನಾರೋಗ್ಯದಲ್ಲಿಯೇ, ಅತ್ಯಂತ ಸರಳ ಜೀವನ ಜೀವಿಸಿದ ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಗ್ರಹಿಸಿ, ವಿಶ್ಲೇಶಿಸಿ, ವರ್ಗಿಕರಿಸದೇ ಇದ್ದಲ್ಲಿ ಅಜ್ಞಾತವಾಗಿ ಉಳಿದಿದ್ದ ಕನ್ನಡದ ಅಮೂಲ್ಯ ವಚನ ಗ್ರಂಥ ಭಂಡಾರ ಇಂದು ವಿಶ್ವಕ್ಕೆ ಪರಿಚಯವಾಗುತ್ತಿರಲಿಲ್ಲ. ಇವರ ಸಾಧನೆಗೆ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದ್ದು, ಅವರ ಜನ್ಮದಿನವನ್ನು ಸರ್ಕಾರವು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಸಾದ್‌ ರಾವ್, ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಲಾ ವಿಭಾಗದ ಡೀನ್ ಪ್ರೊ. ಸೋಜನ್ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ರವಿರಾಜ್ ಶೆಟ್ಟಿ ವಂದಿಸಿದರು. ತ್ರಿವೇಣಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!