Sunday, September 22, 2024
Sunday, September 22, 2024

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

Date:

ಉಡುಪಿ: ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು, ಪ್ರತ್ಯೇಕ ಪ್ರಾಮಾಣೀಕೃತ ಕಾರ್ಯ ವಿಧಾನಗಳನ್ನು (ಎಸ್.ಓ.ಪಿ) ರಚಿಸಿ ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಲ್ಪೆ ಬೀಚ್‌ಗೆ ದೇಶ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಅವರಿಗೆ ಬೀಚ್‌ನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಈಗಾಗಲೇ ವಿವಿಧೆಡೆಗಳಲ್ಲಿ ಇರುವ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಧ್ಯಯನ ಮಾಡಿ, ಮಲ್ಪೆ ಬೀಚ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎಸ್.ಓ.ಪಿ ರಚಿಸಿ, ಅದರಂತೆ ಬೀಚ್ ಉಸ್ತುವಾರಿ ವಹಿಸಿಕೊಂಡಿರುವವರು ಮತ್ತು ಜೀವ ರಕ್ಷಕರು ಕಾರ್ಯನಿರ್ವಹಿಸುವುದರ ಮೂಲಕ ಪ್ರವಾಸಿಗರು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ತಮ್ಮ ಪ್ರವಾಸ ಕ್ಷಣಗಳನ್ನು ಆನಂದಿಸಲು ವ್ಯವಸ್ಥೆ ಮಾಡಬೇಕು ಎಂದರು.

ಬೀಚ್ ನಿರ್ವಹಣಾ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರವಾಸಿಗರ ಸ್ನೇಹಿಯಾಗಿ ವರ್ತಿಸುವ ಬಗ್ಗೆ ಮತ್ತು ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮತ್ತು ನಿರಂತರವಾಗಿ ಪಾಲನೆ ಮಾಡಲು ಆಗಾಗ್ಗೆ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಅವಶ್ಯಕವಿರುವ ಹೆಚ್ಚಿನ ಭದ್ರತಾ ಉಪಕರಣಗಳು, ವಾಹನಗಳು ಮತ್ತಿತರ ಸೌಲಭ್ಯಗಳ ಬಗ್ಗೆ ಸಮಿತಿಯ ಗಮನಕ್ಕೆ ತರುವಂತೆ ಸೂಚಿಸಿದರು.

ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ತೆರಳುವ ಬೋಟುಗಳಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಪ್ರಯಾಣಿಕರು ತಪ್ಪದೇ ಲೈಫ್ ಜಾಕೆಟ್‌ಗಳನ್ನು ಹಾಕಿಕೊಳ್ಳುವಂತೆ ತಿಳಿಸಬೇಕು. ಲೈಫ್ ಜಾಕೆಟ್ ಇಲ್ಲದೆ ಪ್ರಯಾಣಿಕರನ್ನು ಕರೆದುಕೊಂಡು ಹೋದಲ್ಲಿ ಸಂಬಂಧಪಟ್ಟ ಬೋಟುಗಳಿಗೆ ದಂಡ ವಿಧಿಸಲಾಗುವುದು ಮತ್ತು ಲೈಸೆನ್ಸ್ ರದ್ದುಪಡಿಸಲಾಗುವುದು. ಈ ಬಗ್ಗೆ ಕರಾವಳಿ ಕಾವಲು ಪಡೆ ವತಿಯಿಂದ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.

ಬೀಚ್‌ನಲ್ಲಿನ ಗೂಡಂಗಡಿಗಳಲ್ಲಿ ಪ್ರವಾಸಿಗರಿಗೆ ಶುದ್ಧ, ಕಲಬೆರಕೆ ಮತ್ತು ರಾಸಾಯನಿಕ ಬಳಕೆ ರಹಿತ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ನಿಗಧಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ಅನುಮತಿಯಿಲ್ಲದೇ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ಕುರಿತು, ಆಹಾರ ಸುರಕ್ಷತಾ ಅಧಿಕಾರಿಗಳು, ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಜಂಟಿ ತಪಾಸಣೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ 2023 ರ ಜನವರಿ 21 ರಿಂದ 23 ರ ವರೆಗೆ ಬೀಚ್ ಉತ್ಸವ ಆಯೋಜಿಸುವ ಕುರಿತಂತೆ ಹಾಗೂ ಮಲ್ಪೆ ಹಾಗೂ ಪಡುಕೆರೆಯಲ್ಲಿರುವ ಬಂದರು ಇಲಾಖೆಯ ಜಾಗವನ್ನು ಉಪಯೋಗಿಸಿಕೊಂಡು ಆ ಪ್ರದೇಶದಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.

ಮಲ್ಪೆ ಅಭಿವೃದ್ಧಿ ಸಮಿತಿ ಮಾದರಿಯಲ್ಲಿ ಪಡುಕೆರೆ ಬೀಚ್ ಅಭಿವೃದ್ಧಿಗೂ ಸಹ ಪ್ರತ್ಯೇಕ ಸಮಿತಿ ರಚಿಸಿ, ಪಡುಕೆರೆಯಲ್ಲಿ ಹೆಚ್ಚಿನ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವಂತೆ ಮತ್ತು ಮಲ್ಪೆ ಬೀಚ್‌ನ ಉತ್ತರ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದು, ಈ ಬಗ್ಗೆ ಮಾಸ್ಟರ್ ಪ್ಲಾನ್ ತಯಾರಿಸುವಂತೆ ಕೆ. ಶಾಸಕ ರಘುಪತಿ ಭಟ್ ಹೇಳಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ (ಪ್ರಭಾರ) ಗುರುಪ್ರಸಾದ್, ವಿವಿಧ ಇಲಾಖೆಯ ಅಧಿಕಾರಿಗಳು, ಮಲ್ಪೆ ಭಾಗದ ನಗರಸಭಾ ಸದಸ್ಯರು, ಮಲ್ಪೆ ಬೀಚ್ ನಿರ್ವಹಣಾ ಟೆಂಡರ್‌ದಾರರು, ಭಜನಾ ಮಂಡಳಿಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!