Thursday, September 19, 2024
Thursday, September 19, 2024

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Date:

ಉಡುಪಿ, ಜ.26: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಧ್ವಜಾರೋಹಣವನ್ನು ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.

ಸಚಿವ ಅಂಗಾರ ಅವರು ಮಾತನಾಡುತ್ತಾ, ಡಾ. ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಅನುಭವ ಜ್ಞಾನ, ಅಧ್ಯಯನ, ದೂರದೃಷ್ಟಿಯ ಒಳನೋಟಗಳಿಂದ ಸಮಾಜದ ಎಲ್ಲಾ ಶೋಷಿತ ಜನ ಸಮುದಾಯದ ಏಳಿಗೆಗೆ, ಸಹಬಾಳ್ವೆಗೆ, ಮುಖ್ಯ ವಾಹಿನಿಗೆ ಬಂದು ಎಲ್ಲರಂತೆ ಬದುಕುವ ಅವಕಾಶಗಳನ್ನು ಕಲ್ಪಿಸುವ ಶ್ರೇಷ್ಠ ಸಂವಿಧಾನವನ್ನು ರಚಿಸಿದ್ದಾರೆ.

ಭಾರತ ಇಂದು ವಿಶ್ವದ ಅತ್ಯಂತ ಬಲಿಷ್ಠ ರಾಷ್ಟçಗಳ ಸಾಲಿಗೆ ಸೇರಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಕಾಶ ವಿಜ್ಞಾನಗಳಲ್ಲಿ ಭಾರತ ತನ್ನ ಸಾಧನೆಯಿಂದ ಪ್ರಪಂಚದ ಗಮನ ಸೆಳೆದಿದೆ. ಮುಖ್ಯವಾಗಿ ತನ್ನ ಮಾನವ ಸಂಪನ್ಮೂಲ ಕ್ಷಮತೆ ಬಗ್ಗೆ ವಿಶ್ವವೇ ಅಚ್ಚರಿಗೊಂಡಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಈ ಬಾರಿ 5 ಲಕ್ಷ ಕೋ.ರೂ. ಬಂಡವಾಳ ಹೂಡಿಕೆ, 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ನಿರೀಕ್ಷೆ ಸರಕಾರದಾಗಿತ್ತು. ಆದರೆ, ಸಮಾವೇಶದಲ್ಲಿ 9.8 ಲಕ್ಷ ಕೋ.ರೂ. ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆಯಾಗಿ ಉದ್ಯೋಗ ಸೃಷ್ಠಿ ಮತ್ತಷ್ಟು ಹೆಚ್ಚಲಿದೆ.

ರಾಜ್ಯದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯುನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಸರಕಾರದ ಮುಜರಾಯಿ ಇಲಾಖೆಯ ಮಹಾತ್ವಾಕಾಂಕ್ಷಿ ಯೋಜನೆಯಾದ ಭಾರತ್ ಗೌರವ್ ಕಾಶಿ ದರ್ಶನ್ ರೈಲು ಸೇವೆ ಆರಂಭಿಸಲಾಗಿದ್ದು, ಇದರಿಂದಾಗಿ ಭಕ್ತರು ಕಡಿಮೆ ವೆಚ್ಚದಲ್ಲಿ ಕಾಶಿ ಯಾತ್ರೆ ಪ್ರಯಾಣ ಮಾಡಬಹುದಾಗಿದೆ. ರಾಜ್ಯದೆಲ್ಲೆಡೆಯಿಂದ ರೈತರು ಹಾಗೂ ಸಹಕಾರ ಸದಸ್ಯರ ಬೇಡಿಕೆಗೆ ಸ್ಪಂದಿಸಿ, ಯಶಸ್ವಿನಿ ಯೋಜನೆಯನ್ನು ನವೆಂಬರ್ 1 ರಿಂದ ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದೆ. ಇದ್ಕಕಾಗಿ 300 ಕೋ.ರೂ. ಗಳನ್ನು ಕಾಯ್ದಿರಿಸಲಾಗಿದೆ. ಇದರಿಂದ ರೈತಾಪಿ ಹಾಗೂ ಸಹಕಾರಿ ವರ್ಗದ ಬಡ ಕುಟುಂಬಗಳಿಗೆ ತುಂಬಾ ಅನುಕೂಲವಾಗಲಿದೆ.

ರಾಜ್ಯದ ಹೈನುಗಾರಿಕೆಯ ಅಮೃತದಾರೆಯನ್ನು ವಿಶ್ವಮಾನ್ಯ ಮಾಡುವ ನಿಟ್ಟಿನಲ್ಲಿ ದೇಶದ್ಲಲಿಯೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಿದೆ. ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ. ರೈತರ ಅನುಕೂಲ್ಕಕಾಗಿ ಅವರ ಹೊಲದಲ್ಲಿಯೇ ಸಲಹೆ, ಸೂಚನೆ, ಮಾರ್ಗದರ್ಶನ ಹಾಗೂ ತಾಂತ್ರಿಕತೆಯ ಮಾರ್ಗದರ್ಶನ ಮಾಡುವ ಸದುದ್ದೇಶದಿಂದ ಕೃಷಿ ಸಂಜೀವಿನಿ ಸಂಚಾರಿ ಆರೋಗ್ಯ ಚಿಕಿತ್ಸಾಲಯ ಪ್ರಾರಂಭಿಸಿದೆ. ದೇಶದ ಬೆಳವಣಿಗೆಯಲ್ಲಿ ಮಹಿಳೆಯರು ಕೂಡ ಮಹತ್ವದ ಪಾತ್ರ ವಹಿಸಿದ್ದು, ಸರ್ಕಾರವು ಮಹಿಳೆಯರು ಉದ್ಯಮಗಳನ್ನು ನಡೆಸಲು ಉತ್ತೇಜಿಸುವ ಸಲುವಾಗಿ ಆಯವ್ಯಯದಲ್ಲಿ ಮಹಿಳಾ ಕಲ್ಯಾಣ ಯೋಜನೆಗಳಿಗೆ 431.88 ಕೋ.ರೂ. ಗಳನ್ನು ಹಂಚಿಕೆ ಮಾಡಲಾಗಿದೆ.

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರ ಜೊತೆಯಲ್ಲಿ ಕ್ರೀಡೆಗೆ ಸಂಬಂಧಿಸಿದ ಸೌಲಭ್ಯಗಳನ್ನು ದೇಶದ ಉದ್ದಗಲಕ್ಕೆ ಅಭಿವೃದ್ದಿಪಡಿಸಲು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಬಿಸಿದರು. ನಮ್ಮ ಉಡುಪಿ ನಗರದಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಗುಡಿ ಕೈಗಾರಿಕೆ ಕೈಗೊಳ್ಳುವ ಕುಶಲಕರ್ಮಿಗಳಾದ , ಕಮ್ಮಾರ, ಮರಗೆಲಸ, ಕಲ್ಲಿನ ಹಾಗೂ ಮರದ ಕೆತ್ತನೆ, ಕುಂಬಾರಿಕೆ, ಕಸೂತಿ ಕೆಲಸ ಸೇರಿದಂತೆ ಮತ್ತಿತರಿಗೆ ರೂ. 50,000. ದ ಸಾಲ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಹಾಗೂ ಶಸ್ತçಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಜನೌಷಧಿ ಮಳಿಗೆಗಳನ್ನು ಸ್ಥಾಪಿಸುವಲ್ಲಿ ರಾಜ್ಯವು ಎರಡನೇ ಸ್ಥಾನವನ್ನು ಪಡೆದಿದೆ. ಈವರೆಗೆ ರಾಜ್ಯದಲ್ಲಿ 1052 ಕ್ಕೂ ಹೆಚ್ಚು ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಮೀನಿನ ಆಹಾರಗಳು ರುಚಿಯಾಗಿರುವುದು ಒಂದು ಕಡೆಯಾದರೆ ನಮ್ಮ ದೇಹಕ್ಕೆ ಸಿಗುವ ಪ್ರಯೋಜನಗಳು ಹಲವು. ಮೀನು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವನ್ನಾಗಿ ಮಾಡಲು ಮೀನು ಕೃಷಿಗೆ ಉತ್ತೇಜನ ನೀಡುವುದರ ಜೊತೆಗೆ ರಫ್ತು ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ. ಮೀನುಗಾರಿಕಾ ಅಭಿವೃದ್ಧಿ ನಿಗಮವು ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕರ ಸಹ ಭಾಗಿತ್ವ ಯೋಜನೆಯಡಿ ಜನಸಾಮಾನ್ಯರ ಮನೆಬಾಗಿಲಿಗೆ ತಾಜಾ ಮೀನು ಮತ್ತು ಮೀನಿನ ಉತ್ಪನ್ನಗಳನ್ನು ಶೀಘ್ರವಾಗಿ ತಲುಪಿಸುವ ಯೋಜನೆ ರೂಪಿಸಿದ್ದೇವೆ.

ಸರ್ವರಿಗೂ ಆರೋಗ್ಯ ಸೇವೆಯನ್ನು ನೀಡಬೇಕು ಎಂಬ ಧ್ಯೇಯ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುತ್ತಿದ್ದು, ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋ.ರೂ. ವೆಚ್ಚದಲ್ಲಿ ಸಮುದಾಯ ಕೇಂದ್ರಗಳನ್ನಾಗಿ ಉನ್ನತೀಕರಣಗೊಳಿಸಲಾಗುತ್ತಿದೆ. ರಾಜ್ಯದ ನಗರಗಳಲ್ಲಿ ವಾಸಿಸುವ ಬಡಜನರು ಹಾಗೂ ಮಧ್ಯಮ ವರ್ಗದ ಜನರಿಗಾಗಿ 103 ಕೋ.ರೂ ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಈ ಕ್ಲಿನಿಕ್‌ಗಳಲ್ಲಿ ಸುಮಾರು 14 ಕ್ಕೂ ಹೆಚ್ಚಿನ ರೀತಿಯ ತಪಾಸಣೆ ಸೌಕರ್ಯ ಹಾಗೂ ಉಚಿತ ಔಷಧಿ ನೀಡಲಾಗುವುದಲ್ಲದೇ ಹೆಚ್ಚಿನ ಚಿಕಿತ್ಸೆಗೆ ತಜ್ಞರ ಸಲಹೆ ಪಡೆದುಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಕರಾವಳಿಯಲ್ಲಿ ಕಾರ್ಯಾಚರಿಸುತ್ತಿರುವ 3329 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ ರಾಜ್ಯದ ಮಾರಾಟ ಕರ ರಹಿತ ಡೀಸೆಲ್ ಅನ್ನು ಒದಗಿಸಲಾಗುತ್ತಿದೆ. ಅಲ್ಲದೇ 78,983 ಮೀನುಗಾರರನ್ನು ಸಾಮೂಹಿಕ ಅಪಘಾತ ವಿಮಾ ಯೋಜನೆಗೆ ಒಳಪಡಿಸಿ, ವಿಮಾ ಕಂತಿನ ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ. ಮತ್ಸ್ಯ ಸಿರಿ ಯೋಜನೆಯಡಿ 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳನ್ನು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಂಯೋಜಿಸಿ ನೀಡಲು ಉದ್ದೇಶಿಸಿದ್ದು, 120 ಕೋ.ರೂ. ಗಳ ಕ್ರಿಯಾಯೋಜನೆಗೆ ಕೇಂದ್ರ ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಮತ್ಸ್ಯಾಶ್ರಯ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 5,000 ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆಯ ಮೇಲೆ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 69.64 ಕೋ.ರೂ. ಅನುದಾನ ಕಲ್ಪಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ನೀರು ಪೂರೈಕೆ ಇಲ್ಲದ ಮನೆಗಳಿಗೆ ಕುಡಿಯುವ ನೀರು ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆ ಮನೆಗೆ ಗಂಗೆ ಯೋಜನೆಯಡಿ ಜಿಲ್ಲೆಯಲ್ಲಿ 2,47,188 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ಗುರಿ ಹೊಂದಿದ್ದು, ಈಗಾಗಲೇ 1,67,701 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಕಲ್ಪಿಸಿದೆ. ಉಳಿದ ಮನೆಗಳಿಗೆ ಶೀಘ್ರವಾಗಿ ನಳ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕುಗಳ ವ್ಯಾಪ್ತಿಯ 122 ಗ್ರಾಮಗಳ 1904 ಗ್ರಾಮೀಣ ಜನ ವಸತಿಗಳಿಗೆ 1600 ಕೋ.ರೂ ಗಳಲ್ಲಿ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 59 ಗ್ರಾಮಗಳಿಗೆ 585.00 ಕೋ.ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಅಂಗಾರ ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಪ್ರೊಫೆಷನರಿ ಐಎಎಸ್ ಯತೀಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!