Sunday, September 22, 2024
Sunday, September 22, 2024

ಉಡುಪಿ ಜಿಲ್ಲೆಯಲ್ಲಿ ಫಲಾನುಭವಿಗಳ ಬೃಹತ್ ಸಮ್ಮೇಳನ: ಉಸ್ತುವಾರಿ ಸಚಿವ ಅಂಗಾರ

ಉಡುಪಿ ಜಿಲ್ಲೆಯಲ್ಲಿ ಫಲಾನುಭವಿಗಳ ಬೃಹತ್ ಸಮ್ಮೇಳನ: ಉಸ್ತುವಾರಿ ಸಚಿವ ಅಂಗಾರ

Date:

ಉಡುಪಿ, ಫೆ. 27: ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸಲು ಜಿಲ್ಲಾ ಮಟ್ಟದ ಫಲಾನುಭವಿಗಳ ಬೃಹತ್ ಸಮ್ಮೇಳನವನ್ನು ಮಾರ್ಚ್ 5 ರಂದು ಕಾಪು ಕ್ಷೇತ್ರದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸಾರ್ವಜನಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಫಲಾನುಭವಿ ಆಧಾರಿತ ವಿವಿಧ ಇಲಾಖೆಗಳ ಯೋಜನೆಗಳ ಸವಲತ್ತುಗಳನ್ನು ಒಂದೇ ವೇದಿಕೆಯಲ್ಲಿ ವಿತರಿಸಲು ಅನುಕೂಲವಾಗುವಂತೆ ಎಲ್ಲಾ ಇಲಾಖೆಗಳು ತಮ್ಮಲ್ಲಿನ ಫಲಾನುಭವಿ ಆಧಾರಿತ ಯೋಜನೆಗಳಡಿಯಲ್ಲಿ ನೀಡುವ ಸವಲತ್ತುಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಸಚಿವರು ತಿಳಿಸಿದರು.

ಎಲ್ಲಾ ಇಲಾಖೆಗಳು ತಮಗೆ ನೀಡಿರುವ ಫಲಾನುಭವಿ ಆಧಾರಿತ ಗುರಿಯಲ್ಲಿ ಸಂಪೂರ್ಣ ಪ್ರಗತಿ ಸಾಧಿಸಿ ಜಿಲ್ಲೆಯ ಯಾವುದೇ ಫಲಾನುಭವಿಗಳು ಸವಲತ್ತುಗಳಿಂದ ವಂಚಿತರಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ ಸಚಿವರು ಯೋಜನೆಯ ಅನುಷ್ಠಾನಕ್ಕೆ ಅನುದಾನದ ಕೊರತೆ ಅಥವಾ ಮತ್ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಹಾಗೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಇಲಾಖೆಗಳ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಡದಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಮೂಲಕ ಅವರ ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುವ ಜೊತೆಗೆ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಅನುದಾನದ ಸದ್ಬಳಕೆಯು ಇದರಿಂದ ಸಾಧ್ಯವಾಗಲಿದೆ. ಇಲಾಖೆಗಳಲ್ಲಿ ಇದುವರೆಗೆ ಅನುದಾನ ಲಭ್ಯವಿದ್ದು, ಫಲಾನುಭವಿಗಳನ್ನು ಗುರುತಿಸಲು ಸಾಧ್ಯವಾಗದೇ ಇದ್ದಲ್ಲಿ, ಈ ಬಗ್ಗೆ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಪಾಲನೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ವಿವಿಧ ನಿಗಮಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಇಲಾಖೆ, ಕಾರ್ಮಿಕ ಇಲಾಖೆ, ಕೈಗಾರಿಕಾ ಇಲಾಖೆ, ಕಂದಾಯ ಇಲಾಖೆಯ 94 ಸಿ, 94 ಸಿಸಿ ಹಕ್ಕುಪತ್ರಗಳು, ಪಿಂಚಣಿ ಆದೇಶಗಳು, ಪಡಿತರ ಚೀಟಿ ಮತ್ತಿತರ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವಂತೆ ಸೂಚಿಸಿದ ಸಚಿವರು, ಎಲ್ಲಾ ಫಲಾನುಭವಿಗಳಿಗೆ ನೇರವಾಗಿ, ಒಂದೇ ವೇದಿಕೆಯಲ್ಲಿ ಸವಲತ್ತು ವಿತರಿಸಲು ಅನುಕೂಲವಾಗುವಂತೆ ಅವರನ್ನು ಕಾರ್ಯಕ್ರಮಕ್ಕೆ ಕರೆತರಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಫಲಾನುಭವಿಗಳ ಸಮ್ಮೇಳನ ಆಯೋಜನೆಗೆ ಅಗತ್ಯ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಸಚಿವರು, ಈ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಸರಕಾರದ ಸವಲತ್ತುಗಳ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!