Friday, September 20, 2024
Friday, September 20, 2024

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಿಂದ ದೇಶದ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಿಂದ ದೇಶದ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಜೂನ್ 12: ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿ ದಾರಿ ತಪ್ಪಲಿದ್ದು, ಇದರಿಂದ ದೇಶದ ಯುವ ಸಂಪತ್ತು ವ್ಯರ್ಥವಾಗುವುದರಿಂದ ದೇಶದ ಅಭಿವೃದ್ಧಿಗೆ ತೊಡಕಾಗಲಿದೆ. ಆದ್ದರಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಸೋಮವಾರ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಇದರಲ್ಲಿ ತೊಡಗಿರುವ ಬಾಲಕರನ್ನು ರಕ್ಷಿಸಿ ಅವರಿಗೆ ಸೂಕ್ತ ಪುರ್ನವಸತಿ ಮತ್ತು ಶಿಕ್ಷಣವನ್ನು ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕು. ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು. ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಇಲ್ಲಿನ ಯುವಜನತೆ ಉದ್ಯೋಗ ಅರಸಿ ಬೇರೆಡೆಗೆ ತೆರಳುತ್ತಿದ್ದಾರೆ. ಜಿಲ್ಲೆಯ ಯುವಜನತೆಯ ಪ್ರತಿಭೆ ಮತ್ತು ಕೌಶಲ್ಯವನ್ನು ಇನ್ನಷ್ಟು ಉತ್ತಮಗೊಳಿಸಲು ಅಗತ್ಯವಿರುವ ತರಬೇತಿ ಕಾರ್ಯಕ್ರಮಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ಆಯೋಜಿಸಿ, ಅವರಿಗೆ ಜಿಲ್ಲೆಯಲ್ಲಿಯೇ ಸ್ವ-ಉದ್ಯೋಗ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳು ಎಲ್ಲಾ ರೀತಿಯ ನೆರವು ನೀಡಬೇಕು ಎಂದರು. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಲ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಅವರನ್ನು ಅಲ್ಲಿಂದ ರಕ್ಷಿಸಿ, ಸೂಕ್ತ ಪುರ್ನವಸತಿ ಮತ್ತು ಶಿಕ್ಷಣ ಹಾಗೂ ಮಾರ್ಗದರ್ಶನ ನೀಡುವ ಕಾರ್ಯವನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಂತೆ ಪ್ರತಿಜ್ಞಾ ವಿಧಿ ಬೋಧಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಮಕ್ಕಳಿಗೆ ಅವರ ಬಾಲ್ಯವನ್ನು ಸಂತೋಷದಿಂದ ಅನುಭವಿಸಲು ಅವಕಾಶ ಕಲ್ಪಿಸಬೇಕು. ಬಡತನ, ಅನಕ್ಷರತೆ ಹಾಗೂ ಕಾನೂನು ಅರಿವಿನ ಕೊರತೆಯಿಂದ ಬಾಲ ಕಾರ್ಮಿಕ ಪದ್ಧತಿ ಕಂಡುಬರುತ್ತಿದೆ, 14 ವರ್ಷದೊಳಗಿನ ಮಕ್ಕಳನ್ನು ಕಾರ್ಮಿಕರನ್ನಾಗಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಮಕ್ಕಳು ಕಂಡುಬಂದಲ್ಲಿ 1098 ಉಚಿತ ಸಹಾಯವಾಣಿಗೆ ತಿಳಿಸಬಹುದು ಎಂದರು. ಜಿಲ್ಲಾ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ನಾಗರಾಜ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ನಮ್ಮ ಸುತ್ತಮುತ್ತಲು ಬಾಲ ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ (ಪ್ರಭಾರ) ಕಾವೇರಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಅರಿವು ಮತ್ತು ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೈಗಾರಿಕೆಗಳಲ್ಲಿ ತಪಾಸಣೆ ಕಾರ್ಯಗಳನ್ನು ಹಾಗೂ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುತ್ತಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಬಾಲ ಕಾರ್ಮಿಕ ಯೋಜನಾ ಸಂಘದ ಸದಸ್ಯ ಹಾಗೂ ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟು ಪ್ರಸ್ತುತ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು. ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ನಡೆದ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ನಿರ್ದೇಶಕಿ ಅಮೃತಾ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!