Saturday, October 19, 2024
Saturday, October 19, 2024

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

Date:

ಉಡುಪಿ, ನ.1: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 68 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಬುಧವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡದ ಮೊದಲ ಕೃತಿಯಾದ ಕವಿರಾಜ ಮಾರ್ಗದಲ್ಲಿ ಕನ್ನಡನಾಡು ಕಾವೇರಿಯಿಂದ ಗೋದಾವರಿ ನದಿಯವರೆಗೂ ತನ್ನ ಮೇರೆಗಳನ್ನು ಹೊಂದಿತ್ತು. ಎರಡು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಕನ್ನಡ ನಾಡಿನ ಪರಿಪೂರ್ಣ ಪರಿಕಲ್ಪನೆ ಸಕಾರಾತ್ಮಕವಾಗಿದ್ದು, 1956 ನವೆಂಬರ್ 01 ರಂದು ಭಾಷಾವಾರು ಪ್ರಾಂತ್ಯಗಳು ರಚನೆಯೊಂದಿಗೆ ವಿಶಾಲ ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ ಪ್ರಯತ್ನದ ಫಲವಾಗಿ 1973 ರ ನವೆಂಬರ್ 01 ರಂದು ಕರ್ನಾಟಕ ಎಂದು ಮರು ನಾಮಕರಣಗೊಳ್ಳುವುದರೊಂದಿಗೆ ಈ ನಮ್ಮ ನಾಡು ಕನ್ನಡಿಗರನ್ನು ಭಾವನಾತ್ಮಕವಾಗಿ ಬೆಸೆದಿರುವುದು 50 ವಸಂತಗಳಿಗೆ ಸಾಕ್ಷಿಯಾಗಿದೆ. ಕನ್ನಡ ನಾಡು ಭೌಗೋಳಿಕವಾಗಿ ಬಹುತ್ವವನ್ನು ಹೊಂದಿದ್ದರೂ, ಸಾಮುದಾಯಿಕವಾಗಿ ಐಕ್ಯತೆ ಉಳಿಸಿಕೊಂಡು ಬಂದಿದೆ. ಕನ್ನಡ ಭಾಷೆಯ ಮಾಧುರ್ಯವನ್ನು ಅನೇಕ ವಚನಕಾರರು, ದಾಸರು, ಕವಿ ಪುಂಗವರು, ಹಾಡಿ ಹೊಗಳಿದ್ದಾರೆ.

ನಂದಳಿಕೆ ಲಕ್ಷ್ಮೀನಾರಾಯಣ, ಗುಲ್ವಾಡಿ ವೆಂಕಟರಾಯರು, ಕೆ.ಶಿವರಾಮ ಕಾರಂತ, ಹಾವಂಜೆ ಲಕ್ಷ್ಮೀನಾರಾಯಣಪ್ಪಯ್ಯ, ಹಟ್ಟಿಯಂಗಡಿ ನಾರಾಯಣರಾಯರು, ಐರೋಡಿ ಶಿವರಾಮಯ್ಯ, ಮೊಗೇರಿ ಗೋಪಾಲಕೃಷ್ಣ ಅಡಿಗ, ಕಡೆಕಾರು ರಾಜಗೋಪಾಲಕೃಷ್ಣರಾಯ, ಎಸ್.ಯು ಪಣಿಯಾಡಿ, ಕೊರಡ್ಕಲ್ ಶ್ರೀನಿವಾಸರಾವ್, ಪಾವೆಂ ಆಚಾರ್ಯ, ಪಿ ಗುರುರಾಜ ಭಟ್, ಮಟಪಾಡಿ ರಾಜಗೋಪಾಲಾಚಾರ್ಯ ಮುಂತಾದ ಅನೇಕ ಕವಿಗಳು ಸೇರಿದಂತೆ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ ಕ್ಷೇತ್ರಗಳಿಗೆ ಈ ಜಿಲ್ಲೆಯ ಕೊಡುಗೆ ಅನನ್ಯವಾಗಿದೆ. ಕನ್ನಡ ನುಡಿಯನ್ನು ಕಟ್ಟುವ, ಉಳಿಸಿ ಬೆಳೆಸುವ ಕಾಯಕದಲ್ಲಿಯೂ ಜಿಲ್ಲೆಯ ಕೊಡುಗೆ ಅಪಾರ. ನಾಡು ಹರಿದು ಹಂಚಿ ಹೋಗಿದ್ದ ಅಂದಿನ ದಿನಗಳಲ್ಲಿ ಕನ್ನಡ ನಾಡಿನಾದ್ಯಂತ ಬೇರೆ ಬೇರೆ ಭಾಗಗಳಿಗೆ ಹೋಗಿ ಬೆನಗಲ್ ರಾಮರಾಯರು, ಕೋಟ ಶಿವರಾಮ ಕಾರಂತರು, ಪಂಜೆ ಮಂಗೇಶರಾಯರು ಸೇರಿದಂತೆ ಮತ್ತಿತರ ಹಿರಿಯರು ಕನ್ನಡ ಕಹಳೆಯನ್ನು ರಾಜ್ಯಾದ್ಯಂತ ಮೊಳಗಿಸಿದರು. ಭಾರತೀಯ ಭಾಷೆಗಳಲ್ಲಿ ಪ್ರಕಟವಾಗಿ ರಾಷ್ಟ್ರೀಯ ಘನತೆಯನ್ನು ಎತ್ತಿ ಹಿಡಿಯುವ, ಅಂತಾರಾಷ್ಟ್ರೀಯ ಗುಣಮಟ್ಟದ ಶ್ರೇಷ್ಠ ಕೃತಿಗೆ 1965 ರಿಂದ 2022 ರ ವರೆಗೆ ಪ್ರಧಾನ ಮಾಡಲಾಗಿದ್ದ 62 ಜ್ಞಾನಪೀಠ ಪ್ರಶಸ್ತಿಗಳಲ್ಲಿ ಕನ್ನಡದ ಸೃಜನಶೀಲ ಸಾಹಿತ್ಯ ರಚಿಸಿದ ಎಂಟು ಸಾಹಿತಿಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಪ್ರಶಸ್ತಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಕನ್ನಡವಿದೆ.

ಕನ್ನಡ ಭಾಷೆಯನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಾಡಿನ ಯುವ ಸಮುದಾಯದ ಮೇಲಿದೆ. ಭಾಷೆ ನವ ಚೈತನ್ಯವನ್ನು ಮೂಡಿಸಿಕೊಂಡು ಬೆಳೆಯಬೇಕಾದರೆ ಅದು ಯುವ ಸಮುದಾಯದಿಂದ ಮಾತ್ರ ಸಾಧ್ಯ. ಯುವ ಜನರು ತಮ್ಮ ದೈನಂದಿನ ಜೀವನದಲ್ಲಿ ಕನ್ನಡ ಬಳಸುವುದರಿಂದ ಮಾತ್ರ ಸಾಧ್ಯ. ನಮ್ಮ ಜಿಲ್ಲೆಯಲ್ಲಿ ಕನ್ನಡ ಭಾಷೆಯೊಂದೇ ಇಲ್ಲ. ಸ್ಥಳೀಯ ಭಾಷೆಗಳಾದ ತುಳು, ಕೊಂಕಣಿ, ಬ್ಯಾರಿ ಮತ್ತಿತರ ಭಾಷೆಗಳಿವೆ. ಇವೆಲ್ಲವನ್ನು ಬೇರೆ ಎಂದು ನಾವು ಎಂದೂ ಭಾವಿಸಿಯೇ ಇಲ್ಲ. ಈ ಅಚ್ಚ ಕನ್ನಡದ ಜಿಲ್ಲೆಯಲ್ಲಿ ಯಾರನ್ನೂ ‘ಇವನಾರವ ಇವನಾರವ ಎನ್ನದೇ’ ಅಣ್ಣ ಬಸವಣ್ಣ ಹೇಳಿದಂತೆ ‘ಇವ ನಮ್ಮವ- ಇವ ನಮ್ಮವ’ ಎಂದು ಕೊಂಡಿದ್ದೇವೆ. ತಾಳಮದ್ದಳೆಯಲ್ಲಿ ರೂಪುಗೊಳ್ಳುವ ಸಂಭಾಷಣೆಗೆ ಕಲಾವಿದರೆ ಸ್ವಯಂ ಪ್ರತಿಭೆಯಿಂದ ಸೃಷ್ಟಿಸಿ, ಬರವಣಿಗೆಯಿಲ್ಲದೇ ಒಬ್ಬರ ಬಾಯಿಂದ ಪರಿಚಯಿಸಿ, ಮೌಖಿಕ ಸಾಹಿತ್ಯ ರಚಿಸಿದ್ದಾರೆ. ಯಕ್ಷಗಾನ ಪ್ರಸಂಗ ಕರ್ತರು ತಮ್ಮ ಹೆಸರನ್ನು ಬಹಿರಂಗಪಡಿಸದೇ ಕನ್ನಡದಲ್ಲಿ 5,000 ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಇವುಗಳು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಅಮೋಘ ಕೊಡುಗೆಯೆಂದರೆ ತಪ್ಪಾಗಲಾರದು.

ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 1 ನೇ ನವೆಂಬರ್ 2023 ಕ್ಕೆ 50 ವರ್ಷ ಪೂರ್ಣಗೊಳ್ಳುವ ಶುಭ ಸಂದರ್ಭದಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ನಾಮದೊಂದಿಗೆ ವರ್ಷಪೂರ್ತಿ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡುನುಡಿಗೆ ಸಂಬಂಧಿಸಿದಂತೆ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಸ್ಕೃತಿ, ಭಾಷೆ ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಪ್ರಾಂತ್ಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂಬ ಕನಸು ಮಹಾತ್ಮ ಗಾಂಧೀಜಿಯವರದ್ದಾಗಿತ್ತು. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯಬೇಕು, ಸ್ಥಳೀಯ ಭಾಷೆಯ ಮೂಲಕ ಆಡಳಿತ ನಡೆಸಬೇಕೆಂಬುದು ಅವರ ಆಶಯವೂ ಆಗಿತ್ತು. ಅದರಂತೆ ನಮ್ಮ ಸರ್ಕಾರ ರಾಜ್ಯದ ಆಡಳಿತ ಹಾಗೂ ಶಿಕ್ಷಣವನ್ನು ಕನ್ನಡದಲ್ಲಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಪ್ರಕೃತಿ ಏರುಪೇರುಗಳಿಂದಾಗಿ ವಾಡಿಕೆ ಮಳೆ ಬಾರದೇ ರಾಜ್ಯದ 220ಕ್ಕೂ ಹೆಚ್ಚು ತಾಲೂಕುಗಳಲ್ಲಿ ಮಳೆಯು ಕುಂಠಿತವಾಗಿ ಬರದ ಛಾಯೆ ಕಾಣಿಸುತ್ತಿದೆ. ತಾಲೂಕು ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿ, ಬರ ನಿರ್ವಹಣೆಗೆ ಮುಂದಾಗಲಾಗುವುದು. ನಮ್ಮ ರೈತರು ನೀರು ಸಂರಕ್ಷಣೆ, ಮಳೆ ಕೊಯ್ಲು, ಜಲ ಮರು ಸಂರಕ್ಷಣೆ, ವನ ಸಂರಕ್ಷಣೆಗೆ ಒತ್ತು ನೀಡಬೇಕು. ಶಕ್ತಿ ಯೋಜನೆಯು ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಠಿ ನೀಡಿದ್ದು, ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರಿಂದ ಅನುಕೂಲವಾಗುತ್ತಿದೆ. ಗೃಹಜ್ಯೋತಿಯ ಮೂಲಕ ಪ್ರತಿಯೊಂದು ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ 1.49 ಕೋಟಿ ಗ್ರಾಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ 5 ಕೆ.ಜಿ ಅಕ್ಕಿಯ ಬದಲಿಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಶೀಘ್ರದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಮಾಸಿಕ ರೂ. 2000 ಹಣವನ್ನು ಕುಟುಂಬದ ಯಜಮಾನಿಯರಿಗೆ ವರ್ಗಾಯಿಸಲು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗಿದೆ. ಈಗಾಗಲೇ 1.08 ಕೋಟಿ ಕುಟುಂಬಗಳ ಯಜಮಾನಿಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುವ 2000 ರೂ. ಮಾಸಿಕ ಸಹಾಯಧನ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡಲು ಅನುಮೋದನೆ ನೀಡಲಾಗಿದೆ. ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಲಾಗಿರುವ ಯುವನಿಧಿ ಯೋಜನೆಯು 2022-23 ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಜಾರಿಯಾಗಲಿದೆ. ಶೋಷಿತ ವರ್ಗದ ಶ್ರೇಯೋಭಿವೃದ್ಧಿಗೆ ಪಿ.ಟಿ.ಸಿ.ಎಲ್ ಕಾಯಿದೆಗೆ ಮಾಡಲಾಗಿರುವ ತಿದ್ದುಪಡಿಯಿಂದಾಗಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇರುವುದಿಲ್ಲ. ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷಿ ಭಾಗ್ಯ ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಯೋಜನೆಗಳನ್ನು ಮುಂದುವರೆಸಲಾಗಿದೆ. ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಯ ಉದ್ಧೇಶದಿಂದ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ರಾಜ್ಯದಲ್ಲಿ ಸಮೃದ್ಧ ಹಸಿರು ಮತ್ತು ಸ್ವಚ್ಛ ಪರಿಸರವನ್ನು ತರಲು, ನೈಸರ್ಗಿಕ ಅನಿಲದ ಬಳಕೆಯನ್ನು ಹೆಚ್ಚಿಸಲು ಅನಿಲ ಆಧಾರಿತ ಆರ್ಥಿಕತೆಯ ಅಭಿವೃದ್ಧಿಗಾಗಿ ನಗರ ಅನಿಲ ವಿತರಣಾ ಜಾಲದ ಅಭಿವೃದ್ಧಿ ರಾಜ್ಯ ನೀತಿಗೆ ಅನುಮೋದನೆ ನೀಡಲಾಗಿದೆ.

ಜಿಲ್ಲೆಯಲ್ಲಿ 3,67,343 ವಿದ್ಯುತ್ ಗೃಹ ಬಳಕೆದಾರರಿದ್ದು, ಅವರುಗಳಲ್ಲಿ 306106 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಂಡು ಕಳೆದ ಆಗಸ್ಟ್ -ಸೆಪ್ಟಂಬರ್ ಮಾಹೆಯ ಒಟ್ಟು 34.82 ಕೋಟಿ ರೂ ಮೊತ್ತ ರಿಯಾಯಿತಿ ನೀಡಲಾಗಿದ್ದು, ಇದನ್ನು ರಾಜ್ಯ ಸರ್ಕಾರವೇ ಭರಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 2.13 ಲಕ್ಷ ಫಲಾನುಭವಿಗಳ ನೋಂದಣಿಯಾಗಿದ್ದು, 1.77 ಲಕ್ಷ ಫಲಾನುಭವಿಗಳ ಖಾತೆಗೆ 40.67 ಕೋಟಿ ರೂ. ಹಣ ಜಮಾ ಮಾಡಿ, ಶೇ. 88 ರಷ್ಟು ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಕಳೆದ ಜೂನ್ ಮಾಹೆಯಿಂದ ಈವರೆಗೆ 43.20 ಲಕ್ಷ ಮಹಿಳಾ ಪ್ರಯಾಣಿಕರು ಸದುಪಯೋಗ ಪಡೆದುಕೊಂಡಿದ್ದು, ಇದಕ್ಕೆ ಸರ್ಕಾರ 15.84 ಲಕ್ಷ ರೂ. ಭರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಐ.ಸಿ.ಡಿ.ಎಸ್ ಯೋಜನೆಯಡಿ ಒಟ್ಟು 62,246 ಫಲಾನುಭವಿಗಳ ಗುರಿಯಿದ್ದು, 55,200 ಫಲಾನುಭವಿಗಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸಿ ಶೇ.89 ರಷ್ಟು ಸಾಧನೆ ಮಾಡಲಾಗಿದೆ. ಅಂತೆಯೇ ಮಾತೃಪೂರ್ಣ ಯೋಜನೆಯಡಿ ಒಟ್ಟು 11,763 ಫಲಾನುಭವಿಗಳ ಗುರಿಯಿದ್ದು, 11,282 ಫಲಾನುಭವಿಗಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸಿ ಶೇ.86 ರಷ್ಟು ಸಾಧನೆ ಮಾಡಲಾಗಿರುತ್ತದೆ. ಮಕ್ಕಳ ಸಮಗ್ರ ಅಭಿವೃದ್ಧಿ ಸೇವೆ ಯೋಜನೆಯ ಸೇವೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕದ್ರಿಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಪುಷ್ಪಾರವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಸಚಿವರು ಕಳೆದ ಅಕ್ಟೋಬರ್ 10 ರಂದು ದೆಹಲಿಯಲ್ಲಿ ಸನ್ಮಾನಿಸಿರುವುದು ಹೆಮ್ಮೆಯ ವಿಷಯ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಸರ್ಕಾರದ ಪ್ರಮುಖ ಯೋಜನೆಯಾದ ಪಶ್ಚಿಮವಾಹಿನಿ ಯೋಜನೆಯಡಿ ಸುಮಾರು 450 ಕೋಟಿ ರೂ. ಅಂದಾಜು ಮೊತ್ತದಲ್ಲಿ 56 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 2476.70 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ.

ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗಾಗಿ ಸುಮಾರು ರೂ. 26.46 ಕೋಟಿ ಮೊತ್ತದಲ್ಲಿ 5.20 ಕಿ.ಮೀಟರ್ ಉದ್ದಕ್ಕೆ ನದಿದಂಡೆ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕೆರೆ ಆಧುನೀಕರಣ ಯೋಜನೆಯಡಿ ಸುಮಾರು ರೂ. 4.00 ಕೋಟಿ ಅಂದಾಜು ಮೊತ್ತದಲ್ಲಿ 2 ಕೆರೆಗಳನ್ನು ಅಭಿವೃದ್ಧಿಪಡಿಸಿ ಸುಮಾರು 12 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಸಮುದ್ರದ ಹಿನ್ನೀರಿನಿಂದಾಗಿ ಕೃಷಿ ಭೂಮಿಗಳು ಲವಣಯುಕ್ತವಾಗುವುದನ್ನು ಸಂರಕ್ಷಿಸುವ ಸಲುವಾಗಿ ಸುಮಾರು 24 ಕೋಟಿ ರೂ ಮೊತ್ತದ ಖಾರ್ಲ್ಯಾಂಡ್ ಯೋಜನೆಗಳನ್ನು ಕೈಗೊಳ್ಳಲಾಗುವುದು. ಹಾಗೂ ಸುಮಾರು ರೂ. 81.90 ಕೋಟಿ ಮೊತ್ತದ ಎರಡೂ ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಯೋಜನೆಯ ಅನುಷ್ಟಾನದಿಂದಾಗಿ ಸುಮಾರು 325 ಹೆಕ್ಟೇರ್ ಕೃಷಿ ಭೂಮಿಗಳಿಗೆ ನಿರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು 525 ಕಾಮಗಾರಿಗಳನ್ನು 735.78 ಕೋಟಿ ರೂ. ಗಳಲ್ಲಿ ಕೈಗೊಳ್ಳಲಾಗಿದ್ದು, 2,47,190 ಮನೆಗಳ ನಳ ಸಂಪರ್ಕ ಗುರಿ ಹೊಂದಿ, ಪ್ರಸಕ್ತ 1,92,065 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಜಿಲ್ಲೆಯ 122 ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ 1600 ಕೋಟಿ ರೂ ಮೊತ್ತದ ಕಾಮಗಾರಿಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಹಾಗೂ 59 ಗ್ರಾಮಗಳಿಗೆ 585 ಕೋಟಿ ರೂ ಮೊತ್ತದಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ತ್ಯಾಜ್ಯ ಸಂಗ್ರಹಣಾ ವ್ಯವಸ್ಥೆ ಕಲ್ಪಿಸಲಾಗಿದ್ದು, 87 ಗ್ರಾಮ ಪಂಚಾಯತಿಗಳಲ್ಲಿ ಒಣ ತ್ಯಾಜ್ಯಗಳ ನಿರ್ವಹಣೆ ಮಾಡಲಾಗುತ್ತಿದೆ.

ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ (ಅಭಾ ಕಾರ್ಡ್) ಸೃಜನೆಯಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ. ಆಯುಷ್ಮಾನ್ ಭವ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸೆಪ್ಟಂಬರ್ 19 ರಿಂದ ಡಿಸೆಂಬರ್ 1 ರ ವರೆಗೆ ಪ್ರತೀ ಮಂಗಳವಾರದAದು ಜನಸಾಮಾನ್ಯರಿಗೆ ಉಚಿತವಾಗಿ ವಿವಿಧ ಆರೋಗ್ಯ ಸೇವೆಗಳನ್ನು ತಲುಪಿಸಲು ಜಿಲ್ಲೆಯ 6 ಸಮುದಾಯ ಆರೋಗ್ಯ ಕೇಂದ್ರ, 62 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 249 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಆರೋಗ್ಯ ಮೇಳವನ್ನು ನಡೆಸಲಾಗುತ್ತಿದೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಶೇಷ ಚೇತನ ಯೋಜನೆ, ವಿಧವಾ ವೇತನ, ಸಂಧ್ಯಾಸುರಕ್ಷಾ, ಮನಸ್ವಿನಿ ಯೋಜನೆ ಹಾಗೂ ಮೈತ್ರಿ ಯೋಜನೆಯಡಿ ಒಟ್ಟು 1,48,143 ಪಿಂಚಣಿದಾರರಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದೆ. ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಪ್ರತೀ ತಿಂಗಳು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ 232 ಅಹವಾಲು ಸ್ವೀಕೃತವಾಗಿದ್ದು, 173 ವಿಲೇವಾರಿಯಾಗಿ 59 ಅಹವಾಲುಗಳು ತನಿಖಾ ಹಂತದಲ್ಲಿವೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ನಗರೋತ್ಥಾನ ನಾಲ್ಕನೇ ಹಂತದಲ್ಲಿ 80 ಕೋಟಿ ರೂ. ಅನುದಾನದಲ್ಲಿ 71 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 32 ಕಾಮಗಾರಿಗಳು ಮುಕ್ತಾಯಗೊಂಡು ಬಾಕಿ ಉಳಿದ 39 ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು.

ನಾಡು-ನುಡಿಗಳ ಸೇವೆಗಾಗಿ ನಾವು ಈ ನೆಲದಿಂದ ಸ್ಪೂರ್ತಿ ಪಡೆಯೋಣ. ನಮ್ಮ ಪರಮೋಚ್ಛ ಕನ್ನಡಭಾಷೆ, ಸಂಸ್ಕೃತಿಯನ್ನು ಉಳಿಸೋಣ -ಬೆಳೆಸೋಣ. ನಮ್ಮ ಕನ್ನಡ ನಾಡು ಸಮೃದ್ಧವಾಗಿ ಬೆಳೆಯಲಿ ಎಂದು ಹಾರೈಸುತ್ತಾ ತಮ್ಮೆಲ್ಲರಿಗೂ ಮತ್ತೊಮ್ಮೆ 68 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತಾ, ರಾಷ್ಟ್ರಕವಿ ಕುವೆಂಪು ರವರ ಕವನದ ಸಾಲುಗಳೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ರಾಜ್ಯೋತ್ಸವ ಸಂದೇಶಕ್ಕೆ ವಿರಾಮ ಹಾಡಿದರು.

ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕರ್ನಾಟಕ ರಾಜ್ಯದ ಅರಣ್ಯ ಇಲಾಖೆ ಪ್ರಥಮ ಸ್ಥಾನ, ಕೃಷಿ ಇಲಾಖೆ ದ್ವಿತೀಯ ಸ್ಥಾನ ಪಡೆದಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ ಕಾಲೇಜು ವಿದ್ಯಾರ್ಥಿಗಳ ತಂಡದಲ್ಲಿ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ, ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಎರಡನೇ ಸ್ಥಾನ ಮತ್ತು ಉಡುಪಿಯ ಸರಕಾರಿ ಪ್ರೌಢಶಾಲೆ (ಬೋರ್ಡ್ ಹೈಸ್ಕೂಲ್) ತೃತೀಯ ಸ್ಥಾನ ಪಡೆದಿದೆ. ಪಥ ಸಂಚಲನದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ-ಕಾಲೇಜುಗಳ 14 ತುಕಡಿಗಳು ಭಾಗವಹಿಸಿದ್ದು, ಕಾಲೇಜು ವಿಭಾಗದ ಎನ್.ಸಿ.ಸಿ ನೋವೆಲ್ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೊದಲನೇ ಸ್ಥಾನ, ಎನ್.ಸಿ.ಸಿ ನೋವೆಲ್ ವಿಭಾಗದ ಎಂ.ಜಿಂ.ಎಂ ಕಾಲೇಜು ಎರಡನೇ ಸ್ಥಾನ, ಎನ್.ಸಿ.ಸಿ ಆರ್ಮಿ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೂರನೇ ಸ್ಥಾನ ಪಡೆದಿದೆ. ಪ್ರಾಥಮಿಕ ಹೈಸ್ಕೂಲ್ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಂತೆಕಟ್ಟೆ ಕಳತ್ತೂರು ಪ್ರಥಮ ಸ್ಥಾನ, ಸರಕಾರಿ ಪ್ರೌಢಶಾಲೆ ಆವರ್ಸೆ ಎರಡನೇ ಸ್ಥಾನ, ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಉಡುಪಿ ಮೂರನೇ ಸ್ಥಾನ ಪಡೆದಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಒಳಕಾಡು ಮೊದಲನೇ ಸ್ಥಾನ, ನಾರಾಯಣ ಗುರು ಆಂಗ್ಲಮಾಧ್ಯಮ ಶಾಲೆ ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದೆ. ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 29 ಮಂದಿಗೆ ಹಾಗೂ 5 ಸಂಘ-ಸಂಸ್ಥೆಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಚಾಲನೆ ನೀಡಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!