ಬೈಂದೂರು, ಡಿ.10: ಪ್ರಾಯೋಗಿಕವಾಗಿ ಜೀವನ ಶಿಕ್ಷಣವನ್ನು ತರಗತಿಯ ಕಲಿಕೆಯೊಂದಿಗೆ ತಿಳಿದುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ. ಎನ್.ಎಸ್.ಎಸ್. ಎನ್.ಸಿ.ಸಿ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳೇ ಶಿಬಿರದ ಜವಾಬ್ದಾರಿಯನ್ನು ತೆಗೆದುಕೊಂಡು ಸಮರ್ಥವಾಗಿ ನಿಭಾಯಿಸುವ ಮೂಲಕ ನಾಯಕತ್ವ ಗುಣಗಳನ್ನು ಕಲಿತುಕೊಳ್ಳಬಹುದು ಎಂದು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶಂಕರನಾರಾಯಣ ಸಮೀಪದ ಕುಂಬಾರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅವರ ಅಧ್ಯಕ್ಷತೆ ವಹಿಸಿದ್ದರು. ದತ್ತಾತ್ರೇಯ ಭಟ್ ಕುಂಬಾರಮಕ್ಕಿ ಶಿಬಿರಕ್ಕೆ ಶುಭ ಕೋರಿದರು. ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಮಚಂದ್ರ ಆಚಾರಿ ತಮ್ಮ ದಿಕ್ಸೂಚಿ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರದ ಮಹತ್ವವನ್ನು ತಿಳಿಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಶಂಕರನಾರಾಯಣ ಪಂಚಾಯತ್ ಸದಸ್ಯ ರವಿ ಕುಲಾಲ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಇಂದಿರಾ ಮತ್ತು ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಚಿನ್ ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1ರ ಯೋಜನಾಧಿಕಾರಿ ರಾಮಚಂದ್ರ ಜಿ ಎಸ್ ಅವರು ಪ್ರಸ್ತಾವನೆಗೈದು ಸ್ವಾಗತಿಸಿದರು ಹಾಗೂ ಘಟಕ 2ರ ಯೋಜನಾಧಿಕಾರಿ ಪ್ರಜ್ಞಾ ವಂದಿಸಿದರು.




By
ForthFocus™