ಶಂಕರನಾರಯಣ, ಸೆ.19: ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಣದ ಗುರಿಯಾಗಿರಬೇಕು. ಅಂತಹ ಗುರಿಯನ್ನು ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರವು ಸಾಧಿಸುವಲ್ಲಿ ಪ್ರಯತ್ನ ಶೀಲವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು.
ಕಾಲೇಜಿನ ವಿದ್ಯಾರ್ಥಿ ಸಂಘ, ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ವಾರ್ಷಿಕ ಸಂಚಿಕೆ ಯುವ ಮಾನಸ ಬಿಡುಗಡೆ, ನಿರಂತರ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಮತ್ತು ಉಚಿತ ಮಧ್ಯಾಹ್ನ ಊಟದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಈ ಕಾಲೇಜು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ತಮ್ಮ ಜೀವನದ ಉನ್ನತಿಗೆ ಈ ಅವಕಾಶ ಬಳಸಿಕೊಳ್ಳಬೇಕು. ಕಾಲೇಜಿನ ವಾರ್ಷಿಕ ಸಂಚಿಕೆ ಯುವಮಾನಸದಲ್ಲಿ ವಿದ್ಯಾರ್ಥಿಗಳು ಬರೆದ ಉತ್ತಮ ಲೇಖನಗಳನ್ನು ಗುರುತಿಸಿ ಪ್ರಶಂಸಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ರೆಡ್ ಕ್ರಾಸ್ ಅಧ್ಯಕ್ಷ ಜಯಕರ ಶೆಟ್ಟಿ ಕಾಲೇಜಿನ ವಿವಿಧ ಯೋಜನೆ ಮತ್ತು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಮೆಚ್ಚುಗೆಯ ಮಾತುಗಳನ್ನಾಡಿದರು.
ಶಂಕರನಾರಾಯಣದ ಶ್ರೀ ವೀರ ಕಲ್ಲುಕುಟಿಕ ದೈವಸ್ಥಾನದ ಮೊಕ್ತೇಸರ ಮಂಜುನಾಥ ಶೇಟ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು. ಉಚಿತ ಮಧ್ಯಾಹ್ನ ಊಟದ ಯೋಜನೆಯ ಬಗ್ಗೆ ಶುಭ ಹಾರೈಸಿದರು. ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಮತ್ತು ಕಾಲೇಜಿಗೆ ಎ+ ನ್ಯಾಕ್ ಮಾನ್ಯತೆಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಗಂಗರಾಜು ಹಾಗೂ ಜೀವನ ಕೌಶಲ್ಯಗಳ ಕುರಿತು ನಡೆಸಿದ ಸರಣಿ ತರಬೇತಿ ಕಾರ್ಯಕ್ರಮದ ರೂವಾರಿ ನೆರಳು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ರಾಧಾಕೃಷ್ಣ ಕ್ರಮಧಾರಿ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪೋಷಕರ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ, ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡಿದರೆ ಮಾತ್ರ ಬದುಕು ಹಸನಾಗುವುದು ಎಂದು ಕಿವಿಮಾತು ಹೇಳಿದರು. ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್, ಕಾಲೇಜಿನ ಸಾಧನೆಗಳು ಮತ್ತು ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿ, ಎಲ್ಲಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಕಾಲೇಜಿನ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಶಿಸ್ತು, ಶಿಕ್ಷಣದ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೂ ಮುಂಚೆ ಆರ್ ಜೆ ನಯನ ನೀವು ಗೆಲ್ಲಬಹುದು ಎನ್ನುವ ವಿಷಯ ಕುರಿತು ಅಭಿಪ್ರೇರಣೆ ನೀಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಮೃತ ಮತ್ತು ತಂಡ ಪ್ರಾರ್ಥಿನೆಗೈದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವಸಂತ್ ಜಿ ವಂದಿಸಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.




By
ForthFocus™