ಕೋಟೇಶ್ವರ, ಅ.15: ಬದುಕಿನಲ್ಲಿ ಸುಖ-ದುಃಖ, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಭರವಸೆಯಾದ ಯುವಶಕ್ತಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಆರೋಗ್ಯಯುತ ಜೀವನ ಶೈಲಿಯನ್ನು ಪಾಲಿಸಿ ಸ್ವಂತ ಪರಿಶ್ರಮದಿಂದ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಕೀಳರಿಮೆಯಿಂದ ಹೊರಬಂದು ತಮ್ಮ ಬದುಕಿನ ಶಿಲ್ಪಿಗಳಾಗಬೇಕೆಂದು ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡನಗುಡ್ಡೆ, ಉಡುಪಿ ಇಲ್ಲಿನ ಮನಶಾಸ್ತ್ರಜ್ಞರಾದ ಡಾ. ವಿರೂಪಾಕ್ಷ ದೇವರುಮನೆಯವರು ನುಡಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ 2025-26 ನೇ ಸಾಲಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು
ಕಾಲೇಜಿನ ಅಭಿವೃದ್ಧಿಯಲ್ಲಿ ಸೇವಾ ಮನೋಭಾವದಿಂದ ತೊಡಗಿಸಿಕೊಂಡು ಕಾಲೇಜಿನ ಘನತೆ ಗೌರವವನ್ನು ಎತ್ತಿ ಹಿಡಿಯಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಿ ಕರೆ ನೀಡಿದರು.
ಐಕ್ಯೂಎಸಿ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾದ ನಾಗರಾಜ ಯು ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವಿದ್ಯಾರವರ ಮಾರ್ಗದರ್ಶನದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸಂಪತ್ ಕುಮಾರ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ಖಾರ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಸ್ವಾಗತಿಸಿದರು. ವೈಷ್ಣವಿ ಮತ್ತು ತಂಡದವರು ಪ್ರಾರ್ಥಿಸಿ, ವಿದ್ಯಾ ಶೇಟ್ ನಿರೂಪಿಸಿದರು. 2025-26 ನೇ ಸಾಲಿನ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಅಂತಿಮ ಬಿ.ಕಾಂ.ನ ಸಿ.ವಿ. ಕೃತಿಕ್ ವಂದಿಸಿದರು. ವಿದ್ಯಾರ್ಥಿ ವೇದಿಕೆಯ ಉಪಾಧ್ಯಕ್ಷರಾಗಿ ಪ್ರದೀಪ್ ತೃತೀಯ ಬಿ.ಸಿ.ಎ. ಮತ್ತು ದುರ್ಗಾಶ್ರೀ ತೃತೀಯ ಬಿ.ಎಸ್ಸಿ., ಕಾರ್ಯದರ್ಶಿಯಾಗಿ ಪುನೀತ್ ತೃತೀಯ ಬಿ.ಬಿ.ಎ., ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ ತೃತೀಯ ಬಿ.ಎ. ಮತ್ತು ಎಂ.ಕಾಂ ಪ್ರತಿನಿಧಿಯಾಗಿ ನಿಶಾ ಆಯ್ಕೆಯಾದರು.




By
ForthFocus™