ಮಂಗಳೂರು, ನ.8: ಪ್ರತಿ ವಿದ್ಯಾರ್ಥಿಯು ವ್ಯಕ್ತಿಗತ ಸಾಮರ್ಥ್ಯ ಮತ್ತು ಮೌಲ್ಯಗಳನ್ನು ಅರಿತುಕೊಂಡು ಸ್ಪಷ್ಟ ಗುರಿಗಳನ್ನು ನಿಗದಿಪಡಿಸಿಕೊಳ್ಳಬೇಕು. ಗುರಿ ಸಾಧನೆಗೆ ಬೇಕಾದ ಕೌಶಲ್ಯಗಳನ್ನು ಮತ್ತು ಸ್ವಸ್ಥ, ಶಿಸ್ತುಬದ್ಧ ಅಭ್ಯಾಸಗಳನ್ನು ಬೆಳೆಸಿಕೊಂಡಲ್ಲಿ ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ಉತ್ಕೃಷ್ಟತೆ ಸಾಧಿಸಬಹುದು. ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಪ್ರಜ್ಞೆ ಬೆಳೆಸಿಕೊಂಡ ಇಂತಹ ಯುವ ಜನರು ನಾಯಕರಾಗುವುದರ ಜೊತೆಗೆ ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಆಸ್ತಿಯಾಗುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಮತ್ತು ಮಾನವ ಸಂಪನ್ಮೂಲ ತರಬೇತಿದಾರ ಪ್ರೊ. ಮೇಜರ್ ರಾಧಾಕೃಷ್ಣ ಹೇಳಿದರು.
ಅವರು ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ ಮತ್ತು ಐಕ್ಯೂಎಸಿ ವತಿಯಿಂದ ವಿದ್ಯಾರ್ಥಿ ನಾಯಕರುಗಳಿಗೆ ಮತ್ತು ಪ್ರತಿನಿಧಿಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ನಾಯಕತ್ವ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳ 60ರಷ್ಟು ತರಗತಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳಿಗೆ “ನಾಳಿನ ನಾಯಕರು – ಬದಲಾವಣೆಯ ಹರಿಕಾರರು” ಎಂಬ ಶೀರ್ಷಿಕೆ ಯಡಿಯಲ್ಲಿ ಈ ತರಬೇತಿಯನ್ನು ಏರ್ಪಡಿಸಲಾಗಿತ್ತು.
ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಪ್ರೊ. ದುಗ್ಗಪ್ಪ ಕಜೆಕಾರ್., ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ ಮೊದಲಾದವರು ಉಪಸ್ಥಿತರಿದ್ದರು.




By
ForthFocus™