ಮಂಗಳೂರು, ಜು.23: ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇದರ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಓರಿಂಯಂಟೇಶನ್ ಕಾರ್ಯಕ್ರಮ ‘ಶುಭಾರಂಭ’ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ., ಅವರು ಕಾಲೇಜಿನ ನೀತಿ-ನಿಯಮಗಳ ಬಗ್ಗೆ ಶಿಸ್ತು ಪಾಲನೆಯ ಅಗತ್ಯದ ಮತ್ತು ಪದವಿ ಶಿಕ್ಷಣದ ಮಹತ್ವದ ಬಗ್ಗೆ ವಿವರಿಸಿದರು. ಮುಂದಿನ ಮೂರು ವರ್ಷಗಳಲ್ಲಿ ಜ್ಞಾನ, ಕೌಶಲ್ಯಹಾಗೂ ಜೀವನ ಮೌಲ್ಯಗಳನ್ನು ಗಳಿಸಿಕೊಂಡು ಭವಿಷ್ಯಕ್ಕೆ ಸನ್ನದ್ಧರಾಗಬೇಕು ಎಂದು ಹೇಳಿದರು. ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಮಾದಕ ದ್ರವ್ಯ ದುರ್ಬಳಕೆ ಮತ್ತು ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸಹಾಯಕ ಪೊಲೀಸ್ ಆಯುಕ್ತ ರವೀಶ್ ನಾಯಕ್ ಮತ್ತು ಬಂದರು ಠಾಣಾ ಪೊಲೀಸ್ ನಿರೀಕ್ಷಕರಾದ ಸಚಿನ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು. ಸಿಬ್ಬಂದಿ ಪ್ರಮೋದ್ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಂಗಳೂರು ಸಖಿ ಕೇಂದ್ರದ ಆಡಳಿತಾಧಿಕಾರಿ ಯಾ ರಾಜ್ ಮೋಹನ್ ಅವರು ಲಿಂಗ ಸಂವೇದನೆಯ ಬಗ್ಗೆ ಮತ್ತು ಮಹಿಳೆಯರ ಸುರಕ್ಷತೆ ಬಗ್ಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ತಮಗೆ ಸಂಬಂಧಿಸಿದ ಕೋರ್ಸುಗಳ ಪಠ್ಯಕ್ರಮ ಮತ್ತು ಚಟುವಟಿಕೆಗಳ ಬಗ್ಗೆ ಮತ್ತು ಪಠ್ಯೇತರ ಚಟುವಟಿಕೆಗಳು ಮತ್ತು ಕ್ರೀಡಾ ಸೌಲಭ್ಯಗಳ ಬಗ್ಗೆ ಆಯಾಯ ಸಂಯೋಜಕರು ವಿವರಿಸಿದರು.
ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ-ಸಂಯೋಜಕಿ ಡಾ, ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೇದಿಕೆಗಳ ಸಂಯೋಜಕರು ಹಾಗೂ ಬೋಧಕರು ಉಪಸ್ಥಿತರಿದ್ದರು. 2026-27 ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ೫೨೫ ವಿದ್ಯಾರ್ಥಿಗಳು ಭಾಗವಹಿಸಿದರು.




By
ForthFocus™