Home ಸುದ್ಧಿಗಳು ಪ್ರಾದೇಶಿಕ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

279
0

ಉಡುಪಿ, ಮಾ. 15: ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾನ್ಯವಾಗಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತವೆ. ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್ ಇಂದ ಈವರೆಗೆ ಹೇಳುವಂತಹ ಮಳೆ ಬೀಳದೆ ಇರುವ ಕಾರಣ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು, ಒಂದೊಮ್ಮೆ ನೀರಿನ ಸಮಸ್ಯೆಯಾದಲ್ಲಿ ಟ್ಯಾಂಕರ್‌ಗಳ ಮೂಲಕ ಜನ ಸಾಮಾನ್ಯರಿಗೆ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಕಲ್ಪಿಸಬೇಕು ಎಂದ ಅವರು ಕುಡಿಯುವ ನೀರಿನ ಅವಶ್ಯವಿರುವ ತುರ್ತು ಕಾಮಗಾರಿಗಳನ್ನೂ ಸಹ ಕೈಗೆತ್ತಿಕೊಳ್ಳುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು. ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ಟಾಸ್ಕ್ ಪೋರ್ಸ್ ಸಮಿತಿಯ ಪ್ರತೀ ಶುಕ್ರವಾರ ಸಭೆಯನ್ನು ನಡೆಸುವದರೊಂದಿಗೆ ಸ್ಥಳೀಯ ನೀರಿನ ಸಮಸ್ಯೆ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರು ಬೇಸಿಗೆಯೆ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸಬೇಕು, ಅದೇ ರೀತಿ ರೈತರೂ ಸಹ ನೀರು ಅನಗತ್ಯ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಸಾಧ್ಯವಾದಷ್ಟು ತೋಟಗಳಿಗೆ ವಾರಕ್ಕೊಮ್ಮೆ ನೀರು ಹಾಯಿಸಬೇಕೆಂದು ಸಲಹೆ ನೀಡಿದರು. ವಿಪತ್ತು ಪರಿಸ್ಥಿತಿಯ ಬಗೆ ಜನ ಸಾಮಾನ್ಯರಿಗೆ ಎಚ್ಚರಿಕೆ ನೀಡುವ ಡಿ.ಎಂ.ಆರ್ ಟವರ್ ಗಳನ್ನು ಆಯಕಟ್ಟಿನ ಜಾಗಗಳಲ್ಲಿ ಶೀಘ್ರವಾಗಿ ನಿರ್ಮಿಸಿ ಅವುಗಳ ಕಾರ್ಯ ಚಾಲನೆ ಮಾಡಬೇಕು. ಇದರಿಂದಾಗಿ ಜನ ಸಾಮಾನ್ಯರಿಗೆ ವಿಪತ್ತಿನ ಮುನ್ಸೂಚನೆಗಳನ್ನು ನೀಡಲು ಸಾಧ್ಯವಾಗುವುದರ ಜೊತೆಗೆ ಹೆಚ್ಚಿನ ಸಾವು ನೋವುಗಳು ಆಗದಂತೆ ನೋಡಿಕೊಳ್ಳಬಹುದು ಎಂದರು.

ಶಾಲಾ ಹಂತಗಳಲ್ಲಿಯೂ ವಿಪತ್ತು ನಿರ್ವಹಣೆ ಯೋಜನೆಯನ್ನು ಪ್ರತೀ ಶಾಲೆಯಲ್ಲೂ ಪರಿಷ್ಕರಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಎಲ್ಲಾ ರೀತಿಯ ವಿಪತ್ತಗಳನ್ನು ಎದುರಿಸಲು ಅರಿವು ಮೂಡಿಸುವರ ಜೊತೆಗೆ ತಮ್ಮ ಕುಟುಂಬದವರಿಗೂ ಆ ರೀತಿಯಲ್ಲಿ ತಿಳಿಸಲು ಸೂಚಿಸಬೇಕು ಎಂದರು. ಕಳೆದ ಸಾಲಿನಲ್ಲಿ ಮಳೆ ಹಾನಿಯಿಂದ ಉಂಟಾದ ಶಾಲೆ ಅಂಗನವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಮತ್ತಿತರ ಹಾನಿಗಳ ದುರಸ್ತಿ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳುವುದರೊಂದಿಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಹವಾಮಾನ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಉಂಟಾಗುವ ವಿಕೋಪ ಮುನ್ಸೂಚನೆಗಳನ್ನು ಸಾರ್ವಜನಿಕರಿಗೆ ಶೀಘ್ರದಲ್ಲಿಯೇ ತಲುಪಿಸುವುದರ ಜೊತೆಗೆ ಅವುಗಳನ್ನು ಎದುರಿಸುವ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾದಿಕಾರಿ ವೀಣಾ ಬಿ.ಎನ್. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.