Home ಸುದ್ಧಿಗಳು ಪ್ರಾದೇಶಿಕ ವ್ಯಸನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ಕೈಜೋಡಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್

ವ್ಯಸನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ಕೈಜೋಡಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್

120
0

ಉಡುಪಿ, ಜೂ.26: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಜೊತೆಗೆ ಸ್ವಯಂ ಪ್ರೇರಿತರಾಗಿ ಮಾದಕ ವಸ್ತುಗಳ ಸೇವನೆಯನ್ನು ವಿರೋಧಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ.ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ (ಮಾದಕ ವ್ಯಸನ ವಿರೋಧಿ ಘಟಕ, ಕೌನ್ಸಲಿಂಗ್ ಸೆಲ್, ರೇಂರ‍್ಸ್ ಯುನಿಟ್ ಹಾಗೂ ಐ.ಕ್ಯೂ.ಎ.ಸಿ) ಅಜ್ಜರಕಾಡು ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಡ್ರಗ್ಸ್ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣವಾಗಿದೆ. ಮಾದಕ ವ್ಯಸನಕ್ಕೆ ಒಳಗಾದವರು ವ್ಯಸನಮುಕ್ತರಾಗಬೇಕು ಹಾಗೂ ಇದರಿಂದ ಉಂಟಾಗುವ ಮಾನಸಿಕ ಮತ್ತು ದೈಹಿಕ ಕೆಡುಕುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆಚರಣೆಯು ಈ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ಇವುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ಮಾನಸಿಕ ಖಿನ್ನತೆ ಯಾರಿಗೂ ಕಾಣದ ದೊಡ್ಡ ಪಿಡುಗು. ಸಣ್ಣ-ಪುಟ್ಟ ಕಾರಣಗಳಿಗೆ, ಸೂಕ್ಷ್ಮ ವಿಷಯಗಳ ಕಾರಣದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯು ತನಗೆ ಅರಿವಿಲ್ಲದಂತೆ ಮಾದಕ ವ್ಯಸನಿಯಾಗುತ್ತಾನೆ. ಈ ದುಶ್ಚಟಕ್ಕೆ ಬಲಿಯಾದ ವ್ಯಕ್ತಿಯು ಅನೇಕ
ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇರುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ ಮಾತನಾಡಿ, ಮಾದಕ ವಸ್ತು ಸೇವನೆಯು ಸಾಮಾಜಿಕ ಪಿಡುಗಾಗಿದ್ದು, ಇದರ ಸೇವನೆಯಿಂದ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮ ಉಂಟಾಗುತ್ತದೆ. ಮಾದಕ ಸೇವನೆಯ ಚಟಕ್ಕೆ ಒಳಗಾದಲ್ಲಿ ಅದರಿಂದ ಹೊರಬರಲು ತೀರ ಕಷ್ಟ ಸಾಧ್ಯ. ಆಲ್ಕೋಹಾಲ್, ಸಿಗರೇಟ್, ತಂಬಾಕು, ಡ್ರಗ್ಸ್, ಅಫೀಮು, ಕೊಕೈಲ್‌ನಂತಹ ಮಾದಕ ದ್ರವ್ಯಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದ್ದು, ದುಷ್ಪರಿಣಾಮಗಳ ಅರಿವಿದ್ದರೂ ಕೂಡ ಯುವಜನತೆ ವ್ಯಸನಿಗಳಾಗಿ ಅದರಿಂದ ಹೊರಬರಲಾಗದೆ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ಪಡೆದು ಅದನ್ನು ತಮ್ಮ ಕುಟುಂಬದವರಿಗೆ ಹಾಗೂ ಸಮಾಜಕ್ಕೆ ತಲುಪಿಸಿದ್ದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿನಾಶದ ಮೂಲವೇ ನಶೆ. ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಹೀನ ಕೃತ್ಯಗಳು, ಸಮಾಜ ದ್ರೋಹಿ ಹಾಗೂ ವಿಧ್ವಂಸಕ ಕೃತ್ಯಗಳಿಗೆ ನಶೆಯೇ ಮೂಲ ಕಾರಣ. ನಶಾ ಮುಕ್ತ ಸ್ವಸ್ಥö್ಯಸಮಾಜ ನಿರ್ಮಾಣಕ್ಕೆ ಯುವಜನತೆ ಬೆನ್ನೆಲುಬಾಗಿ ನಿಲ್ಲಬೇಕು. ನಶಾ ಮುಕ್ತ ಭಾರತ ನಿರ್ಮಾಣದ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ರೇಂಜರ್ಸ್ ಯುನಿಟ್‌ನ ಸಂಚಾಲಕಿ ರಮ್ಯ ವಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ನಶಾ ಮುಕ್ತ ಭಾರತ ಅಭಿಯಾನದಡಿ ಆಯೋಜಿಸಲಾದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಐ.ಕ್ಯೂ.ಎ.ಸಿ ಸಂಚಾಲಕ ಸೋಜನ್ ಕೆ.ಜೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಾದಕ ದ್ರವ್ಯ ವಿರೋಧಿ ಘಟಕದ ಸಂಚಾಲಕಿ ಶುಭಾ ಬಿ.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಶಿವಾಜಿ ವಂದಿಸಿದರೆ, ದಿವ್ಯಶ್ರೀ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.