Saturday, September 28, 2024
Saturday, September 28, 2024

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು ವೈದ್ಯರುಗಳು ಹಾಗೂ ಸಿಬ್ಬಂದಿಗಳು ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯ ಗೊಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇವುಗಳ ಅನುಷ್ಠಾನವನ್ನು ಸರಕಾರದ ಮಾರ್ಗಸೂಚಿ ಅನ್ವಯ ನಿಗದಿತ ಕಾಲಾವಧಿಯಲ್ಲಿ ಕಾಲಕಾಲಕ್ಕೆ ಕೈಗೊಂಡು ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಸಂಸ್ಥೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಇವುಗಳನ್ನು ಸಂಗ್ರಹಿಸುವ ಏಜೆನ್ಸಿಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಅಲ್ಲದೆ ಔಷಧಿ ಬಾಟಲ್‌ಗಳು, ಡೈಪರ್‌ಗಳನ್ನು ಎಲ್ಲೆಂದರಲ್ಲಿ ಎಸೆದಲ್ಲಿ ನದಿ ಸೇರಿ ನೀರಿನ ಮಾಲಿನ್ಯ ಉಂಟಾಗುತ್ತದೆ. ಇವುಗಳ ನಿಯಂತ್ರಣಕ್ಕೆ ಸಹ ನಿಗಾ ವಹಿಸಬೇಕು. ಜನಸಾಮಾನ್ಯರು ಸಹ ತಮ್ಮ ಮನೆಯಲ್ಲಿ ಉಪಯೋಗಿಸಿದ ಸಿರಿಂಜ್‌ಗಳು ಮತ್ತಿತರ ವೈದ್ಯಕೀಯ ಉಪಕರಣಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿಸಲು ಅರಿವು ಮೂಡಿಸುವುದು ಸೂಕ್ತ ಎಂದರು.

ಕೆ.ಪಿ.ಎಂ.ಇ ಅಡಿಯಲ್ಲಿ ಅನುಮತಿ ಪಡೆದ ಕ್ಲಿನಿಕ್‌ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿಯನ್ನು ಹಾಗೂ ವೈದ್ಯರ ಮೇಲಿನ ಹಲ್ಲೆ ಕುರಿತು ಜಾರಿಗೆ ತಂದಿರುವ ಕಾನೂನು ಬಗ್ಗೆ ಎದ್ದು ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು ಎಂದ ಅವರು, ವೈದ್ಯಾಧಿಕಾರಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ಮಾಡಬೇಕು ಎಂದು ಸೂಚನೆ ನೀಡಿದರು. ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಹೆಚ್ಚು ಜನ ರೋಗಿಗಳು ಬರುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಹೊಸದಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಯುಷ್ಮಾನ್ ಯೋಜನೆ ಅಡಿಯಲ್ಲಿ ಚಿಕಿತ್ಸೆ ಪಡೆಯುವಂತೆ ನಾಮನಿರ್ದೇಶನಗೊಳಿಸಲು ಸರಕಾರಕ್ಕೆ ಅನುಮೋದನೆಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಹೆಚ್.ಐ.ವಿ ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ಸರಕಾರದಿಂದ ನೀಡುತ್ತಿರುವ ವಿಶೇಷ ಪಾಲನಾ ಯೋಜನೆಯನ್ನು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ವಸತಿ ಯೋಜನೆಗಳನ್ನು ಸ್ಥಳೀಯ ಸಂಸ್ಥೆಗಳು ಆದ್ಯತೆ ಮೇಲೆ ನೀಡಬೇಕು ಎಂದ ಅವರು, ಅವರುಗಳಿಗೆ ವೈದ್ಯಕೀಯ ಚಿಕಿತ್ಸೆಯ ವ್ಯವಸ್ಥೆ, ಔಷಧೋಪಚಾರಗಳನ್ನು ಉಚಿತವಾಗಿ ಎ.ಆರ್.ಟಿ ಸೆಂಟರ್‌ಗಳಲ್ಲಿ ನೀಡಿ ಕಾಳಜಿ ವಹಿಸಬೇಕು. ಯುವಜನರಿಗೆ ಏಡ್ಸ್ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಸಾರ್ವಜನಿಕ ಲಸಿಕಾ ಕಾರ್ಯಕ್ರಮದಡಿ ಎಲ್ಲಾ ಲಸಿಕೆಗಳನ್ನು ಮಕ್ಕಳಿಗೆ ಕಾಲಕಾಲಕ್ಕೆ ನೀಡಲು ಕ್ರಮ ವಹಿಸಬೇಕು. ಕುಷ್ಠರೋಗವನ್ನು ಆರಂಭಿಕ ಹಂತದಲ್ಲಿಯೇ ಕಂಡುಕೊಂಡು ಅದಕ್ಕೆ ಚಿಕಿತ್ಸೆ ನೀಡಿದ್ದಲ್ಲಿ ಅವರುಗಳ ಆರೋಗ್ಯ ಸುಧಾರಣೆ ಆಗುತ್ತದೆ. ಈ ರೋಗವು ಕಂಡುಬರುವ ಪ್ರದೇಶಗಳಲ್ಲಿ ಮನೆ ಮನೆ ಭೇಟಿ ನೀಡಿ ರೋಗದ ಪತ್ತೆ ಕಾರ್ಯವನ್ನು ಮಾಡುವುದು ಉತ್ತಮ ಎಂದು ಸಲಹೆ ನೀಡಿದರು. ಭ್ರೂಣ ಹತ್ಯೆ ಮತ್ತು ಲಿಂಗ ಪತ್ತೆಯಂತಹ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾಯ್ದೆಯನ್ವಯ ಕ್ರಮ ಕೈಗೊಳ್ಳಬೇಕು. ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸಮಿತಿಯ ಸದಸ್ಯರುಗಳು ಅನಿರೀಕ್ಷಿತವಾಗಿ ನಿರಂತರ ಭೇಟಿ ಮಾಡುವುದು, ಪರಿಶೀಲನೆ ಮಾಡಬೇಕು ಎಂದ ಅವರು ಪ್ರಸ್ತುತ ಸಾಲಿನ ಕಳೆದ 5 ತಿಂಗಳಲ್ಲಿ ಲಿಂಗಾನುಪಾತ 1000 ಗಂಡು ಮಕ್ಕಳಿಗೆ 1015 ಹೆಣ್ಣು ಮಕ್ಕಳ ಜನನವಾಗಿದೆ. ಎಂದರು.

ಸಮಾಜದಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಕಾರ್ಯಸನ್ನದ್ಧರಾಗಬೇಕು. ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲೆಯಲ್ಲಿ ಒಟ್ಟು 45,857 ನೋಂದಣಿ ಮಾಡಿಸಿದ್ದು, ಬಿ.ಸಿ.ಜಿ ಲಸಿಕೆ ಜಿಲ್ಲೆಗೆ ಸರಬರಾಜು ಆದ ತಕ್ಷಣ, ಲಸಿಕೆ ನೀಡಲು ಕ್ರಮ ವಹಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ.ಅಶೋಕ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜೋತ್ಸ್ನಾ ಬಿ.ಕೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮ

ಉಡುಪಿ, ಸೆ.27: ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ...
error: Content is protected !!