ಬಸ್ರೂರು, ಫೆ.15: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ ಕಾಲೇಜಿನ ಶೀ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೆ ರಾಧಾಕೃಷ್ಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸಕರಿಗೆ ಶೈಕ್ಷಣಿಕ ಅಭಿವೃದ್ಧಿ, ತರಬೇತಿ, ಸಂಶೋಧನೆ, ತಂತ್ರಜ್ಞಾನದ ಬಳಕೆ ಬಗ್ಗೆ ಮಾಹಿತಿ ಅತಿ ಅಗತ್ಯವಾಗಿದೆ ಎಂದರು. ಉಪನ್ಯಾಸಕರು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಜೈನ್ ಪರಿಗಣಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅನಿಲಾ ಬಾಜಪೇಯಿ ಭಾಗವಹಿಸಿ ಉಪನ್ಯಾಸಕರಿಗೆ ತರಬೇತಿ ನೀಡಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರವಿಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ಐಕ್ಯೂಏಸಿ ಸಂಯೋಜಕರಾದ ಸಂದೀಪ್ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ದೀಪಕ್ ಕುಮಾರ್ ಶೆಟ್ಟಿ ವಂದಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು.