ಕೋಟೇಶ್ವರ, ಮಾ.4: ಕ್ರೀಡೆಯಲ್ಲಿ ಆರೋಗ್ಯಕರ ಬೆಳವಣಿಗೆ ಇದ್ದರೆ ಮಾತ್ರ ಬೆಳವಣಿಗೆಗೆ ಪೂರಕ. ಬದುಕಿನಲ್ಲಿ ಗೆಲ್ಲುವುದು ಮುಖ್ಯವಲ್ಲ. ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವುದು ಮುಖ್ಯ. ಕ್ರೀಡೆಯಲ್ಲಿ ಸೋಲೋ-ಗೆಲುವೋ ಎರಡೂ ಸಂದರ್ಭದಲ್ಲಿ ಗೌರವದಿಂದ ನಡೆದುಕೊಂಡಾಗ ಆ ಅನುಭವದ ಅನುಭೂತಿ ಬಲು ದೊಡ್ಡದು. ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಇದ್ದಾಗ ಮಾತ್ರ ಅದು ನಿಮ್ಮೆಲ್ಲರ ಬೆಳವಣಿಗೆಗೆ ಪೂರಕವಾಗುತ್ತದೆ ಎಂದು ಅರಣ್ಯ ಗುತ್ತಿಗೆದಾರರಾದ ಜೆ.ಪಿ. ಶೆಟ್ಟಿ ಕಟ್ಕೆರೆ ಹೇಳಿದರು. ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿನ 18ನೇ ವರ್ಷದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡುತ್ತಾ, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಕ್ರೀಡಾ ಸ್ಪೂರ್ತಿಯೊಂದಿಗೆ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಿರೆಂದು ಕರೆ ನೀಡಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ಖಾರ್ವಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐ.ಕ್ಯೂ.ಎ.ಸಿ. ಸಂಚಾಲಕರಾದ ನಾಗರಾಜ ಯು., ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸೂರಜ್, ಕ್ರೀಡಾ ಕಾರ್ಯದರ್ಶಿಗಳಾದ ಅಂಕಿತ್ ಮತ್ತು ನವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿ ನಿತಿನ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಕ್ರೀಡಾ ಸಂಚಾಲಕ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಬಿ. ಸ್ವಾಗತಿಸಿದರು. ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ವಂದಿಸಿದರು. ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದ ದೈಹಿಕ ಶಿಕ್ಷಣ ನಿರ್ದೇಶಕರಾದ ಕಿರಣ ವಿಷ್ಣು ಪಟಗಾರ ಕ್ರೀಡಾಕೂಟವನ್ನು ಸಂಘಟಿಸಿದರು. ಪ್ರಥಮ ಎಂ.ಕಾಂ.ನ ರಶ್ಮಿ ಉಡುಪ ಕಾರ್ಯಕ್ರಮ ನಿರೂಪಿಸಿದರು. ಕವನ ಮತ್ತು ತಂಡದ ಪ್ರಾರ್ಥಿಸಿದರು.




By
ForthFocus™