ಉಡುಪಿ, ನ.2: ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಸಂಜೀವಿನಿ ಮಹಿಳಾ ಗುತ್ತಿಗೆದಾರರಿಗೆ ಒಡಂಬಡಿಕೆ ಹಸ್ತಾಂತರ ಮಾಡಿದರು.
ಜಿಲ್ಲಾ ಪಂಚಾಯತ್ ಉಡುಪಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಮೂಲಕ ಸಂಜೀವಿನಿ ಸ್ವ ಸಹಾಯ ಗುಂಪಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಹಾಗೂ ಗುತ್ತಿಗೆದಾರರಾಗಲು ಆಸಕ್ತಿಯುಳ್ಳ ಮಹಿಳೆಯರನ್ನು ಗುರುತಿಸಲಾಗಿದೆ ಹಾಗೂ ಸರಕಾರಿ ಇಲಾಖೆಯ ಗುತ್ತಿಗೆಗಳನ್ನು ಇವರಿಗೆ ನೀಡುವ ಯೋಜನೆ ರೂಪಿಸಲಾಗಿದೆ. ಇದು ಮಹಿಳಾ ನೇತೃತ್ವದ ಗ್ರಾಮೀಣ ಮಹಿಳೆಯರ ಸಬಲೀಕರಣದ ಹೊಸ ಉಪಕ್ರಮವಾಗಿದೆ. ಈ ಯೋಜನೆಯ ಉದ್ದೇಶ, ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ನಿರ್ಮಾಣ ಕ್ಷೇತ್ರದಲ್ಲಿ ಕೇಂದ್ರ ಬಿಂದುವಾಗಿ ರೂಪಿಸಿ ಇವರಿಗೆ ಹಾಗೂ ಇವರ ಅಧೀನದ ಕೆಲಸಗಾರರಿಗೆ ಶಾಶ್ವತ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದಾಗಿದೆ.ಕಲ್ಯಾಣಪುರ ಗ್ರಾಮ ಪಂಚಾಯತ್ ನ ಬೆನಕ ಸಂಜೀವಿನಿ ಸ್ವ ಸಹಾಯ ಗುಂಪಿನ ಶಾಲಿನಿ ಸುರೇಶ್ ಹಾಗೂ ಕೊರಗಜ್ಜ ಸಂಜೀವಿನಿ ಸ್ವ ಸಹಾಯ ಗುಂಪಿನ ಸ್ಮಿತಾ ಇವರು ಈಗಾಗಲೇ ಸಂಬಂಧ ದಾಖಲೆಗಳನ್ನು ಪಡೆದಿದ್ದಾರೆ.
ಸರಕಾರಿ ಇಲಾಖೆಗಳಲ್ಲಿನ ಗುತ್ತಿಗೆ ಕೆಲಸಗಳನ್ನು ಈ ಮಹಿಳೆಯರಿಗೆ ನೀಡಲಾಗುವುದು.ಒಂದು ಕಾಲದಲ್ಲಿ ನಿರ್ಮಾಣ ಕ್ಷೇತ್ರ ಪುರುಷ ಪ್ರಧಾನವಾಗಿದ್ದು ಜಿಲ್ಲೆಯ ಗ್ರಾಮೀಣ ಪ್ರದೇಶದ ಸಂಜೀವಿನಿ ಮಹಿಳೆಯರು ಹೊಸ ಉದ್ಯಮಿದಾರರಾಗಲು ಸಿದ್ದರಾಗಿದ್ದಾರೆ.
ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಕಿರಣ ಕುಮಾರ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™