Wednesday, September 9, 2026
Wednesday, September 9, 2026

ಗೃಹರಕ್ಷಕರ ಸಾಧನೆ ಇತರರಿಗೆ ಮಾದರಿಯಾಗಲಿ: ಎ.ಎಸ್.ಪಿ ಸುಧಾಕರ್ ಎಸ್. ನಾಯ್ಕ್

ಗೃಹರಕ್ಷಕರ ಸಾಧನೆ ಇತರರಿಗೆ ಮಾದರಿಯಾಗಲಿ: ಎ.ಎಸ್.ಪಿ ಸುಧಾಕರ್ ಎಸ್. ನಾಯ್ಕ್

Date:

ಉಡುಪಿ, ಡಿ.9: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿಯೂ ಗೃಹರಕ್ಷಕರು ಪೊಲೀಸರಷ್ಟೇ ಸಮರ್ಥರಾಗಿ ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಜೊತೆಗೆ ವೈಯಕ್ತಿಕವಾಗಿಯೂ ಸಾಧನೆ ಮಾಡುತ್ತಿದ್ದಾರೆ. ಇವರ ಸಾಧನೆ ಇತರರಿಗೂ ಮಾದರಿಯಾಗಲಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್ ಹೇಳಿದರು. ಅವರು ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗೃಹರಕ್ಷಕರು ಪೊಲೀಸ್, ಎನ್.ಸಿ.ಸಿ, ಪ್ರವಾಸೋದ್ಯಮ, ಸಾರಿಗೆ, ಪುರಾತತ್ವ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ತಮ್ಮ ಸೇವೆ ನೀಡುವ ಜೊತೆಗೆ ಪ್ರಾಕೃತಿಕ ವಿಕೋಪ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷತಾ ವ್ಯವಸ್ಥೆಯನ್ನೂ ನಿರ್ವಹಿಸುತ್ತಿರುತ್ತಾರೆ. ತಮ್ಮ ಕಾರ್ಯಕ್ಷೇತ್ರಗಳಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಜೊತೆ ವಿವಿಧ ಕೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆಗೂ ಕೀರ್ತಿ ತರುತ್ತಿದ್ದು, ಇವರಿಂದ ಇತರರೂ ಪ್ರೇರಣೆ ಪಡೆದು ಸಾಧನೆ ಮಾಡಬೇಕು. ಗೃಹರಕ್ಷಕರ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಹೆಸರು ತರುವಂತಾಗಬೇಕು ಎಂದು ಅವರು ಹೇಳಿದರು. ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯ. ಬಹುತೇಕ ಗ್ರಾಮೀಣ ಭಾಗಗಳಿಂದ ಬರುವ ಗೃಹರಕ್ಷಕರು ಸುರಕ್ಷಿತ ಸಮಾಜ ಕಟ್ಟುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ನಡೆಯುವ ಅಸಾಮಾಜಿಕ ಕೃತ್ಯಗಳನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಗೃಹರಕ್ಷಕರು ಸಮಾಜದಲ್ಲಿರುವ ಲೋಪದೋಷಗಳನ್ನು ತಿದ್ದುವ ನಿಟ್ಟಿನಲ್ಲಿಯೂ ಕಾರ್ಯೋನ್ಮುಖರಾಗಬೇಕು ಎಂದರು.

ಇಂದಿನ ಯುವಜನತೆಯು ತಂಬಾಕು, ಮಾದಕ ದ್ರವ್ಯ ಸೇವನೆಯಂತಹ ದುಷ್ಚಟಗಳ ದಾಸರಾಗುತ್ತಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ವಯಸ್ಕರು ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಕ್ಯಾನ್ಸರ್ ನಂತಹ ಜೀವನಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೃಹರಕ್ಷಕರು ತಾವು ಸೇವೆ ನೀಡುತ್ತಿರುವ ಹಳ್ಳಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಂಡು ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದಲ್ಲಿ ಆರೋಗ್ಯವಂತ ಹಾಗೂ ಅಪರಾಧ ಮುಕ್ತ ಸಮಾಜ ನಿರ್ಮಿಸಬಹುದು. ನಿತ್ಯದ ಜೀವನದಲ್ಲಿ ಸರಿಯಾದ ಆಹಾರ ಪದ್ದತಿ, ಮಾನಸಿಕ ಆರೋಗ್ಯ ಮತ್ತು ದೈಹಿಕ ವ್ಯಾಯಾಮದ ಅವಶ್ಯಕತೆಯ ಬಗ್ಗೆ ಜನರಿಗೆ ಶಿಕ್ಷಣ ನೀಡಿ ಸದೃಢ ಸಮಾಜ ರೂಪಿಸಬೇಕೆಂದು ಅವರು ಕರೆ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗೃಹರಕ್ಷರಾದ ಶಶಿಕಿರಣ್, ಅನಿಲ್ ಥೋಮಸ್, ಜಯಂತಿ, ಸಂಧ್ಯಾ, ಲತಾ ಮತ್ತು ದಿನೇಶ್ ಇವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ವಾರ್ಷಿಕ ವರದಿ ವಾಚಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ರತ್ನಾಕರ್ ಸನ್ಮಾನಿತರ ವಿವರ ವಾಚಿಸಿದರು. ಬ್ರಹ್ಮಾವರ ಘಟಕ ಪ್ಲಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿ, ಪ್ರಭಾಕರ್ ಸುವರ್ಣ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!