ಉಡುಪಿ, ಡಿ.15: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಶನಿವಾರ ಕಾಲೇಜು ಸಭಾಂಗಣದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾರ್ಕಳ ಎಸ್.ವಿ.ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ.ಶೆಣೈ ಉದ್ಘಾಟಿಸಿ ಮಾತನಾಡಿ, ಕಾರಂತರು ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಸೀಮಿತವಾಗದೇ ಯಕ್ಷಗಾನ ಹಾಗೂ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಯಕ್ಷಗಾನಕ್ಕೆ ಹೊಸ ರೂಪ ನೀಡಿದರು. ಇಂದಿನ ಯುವ ಪೀಳಿಗೆಗಳು ಅವರ ಕೃತಿಗಳನ್ನು ಓದುವ ಮೂಲಕ ಅದರ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.
ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯ ಮಾತ್ರವಲ್ಲದೇ ಭಾರತೀಯ ಸಾಹಿತ್ಯದಲ್ಲಿಯೂ ಸಹ ದೊಡ್ಡ ಹೆಸರು. ಕರಾವಳಿ ಕರ್ನಾಟಕದ ದೈತ್ಯ ಪ್ರತಿಭೆ ಕಾರಂತರ ಪರಿಚಯ ವ್ಯಾಪಕವಾಗಿ ನಡೆದಿಲ್ಲ. ವಿದ್ಯಾರ್ಥಿಗಳಿಗೆ ಕಾರಂತರನ್ನು ಪರಿಚಯಿಸುವುದರೊಂದಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ವಿಚಾರವನ್ನು ತಿಳಿಸಿ ಓದುವ ಹವ್ಯಾಸವನ್ನು ಬೆಳೆಸುವುದು ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ ಎಂದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕಿ ಶಾಲಿನಿ ಯು.ಬಿ, ಕಾರಂತರ ಕಾದಂಬರಿಗಳ ಸಿನೆಮಾಗಳಲ್ಲಿ ಬದುಕಿನ ಅಭಿವ್ಯಕ್ತಿ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಆತ್ರಾಡಿ ಅಮೃತ ಶೆಟ್ಟಿ, ಉಪನ್ಯಾಸಕಿ ರೇಖಾ, ಸಾಹಿತ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಗೀತಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿ ಮಂಜುಳಾ ನಿರೂಪಿಸಿ, ಶ್ರೀನಿಧಿ ವಂದಿಸಿದರು.




By
ForthFocus™