ಉಡುಪಿ, ಫೆ.22: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗ ಉಡುಪಿ ಜಿಲ್ಲೆ ಮತ್ತು ಜಿ ಶಂಕರ್ ಪ್ರಥಮ ದರ್ಜೆ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕುಷ್ಠರೋಗ ಕುರಿತಾದ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ‘ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಶಂಕರ್ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ ಡಾ.ನಿಕೇತನ ಮಾತನಾಡಿ, ಯುವಜನತೆ ಕುಷ್ಠರೋಗದ ಕುರಿತಾಗಿ ಸಮಗ್ರ ಮಾಹಿತಿಯನ್ನು ತಿಳಿದುಕೊಂಡು ಸಮುದಾಯದಲ್ಲಿ ಜಾಗೃತಿ ಮೂಡಿಸಿ ಕುಷ್ಠರೋಗ ಮುಕ್ತ ಸಮುದಾಯ ತನ್ಮೂಲಕ ಕುಷ್ಠಮುಕ್ತ ಭಾರತ ನಿರ್ಮಿಸಲು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಆರೋಗ್ಯ ರಾಯಭಾರಿಗಳಾಗಿ ಕೆಲಸ ನಿರ್ವಹಿಸಲು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ಕುಷ್ಠರೋಗದ ಕುರಿತಾಗಿ ಸಮಗ್ರ ಮಾಹಿತಿಯನ್ನು ನೀಡುತ್ತಾ, ಸಮುದಾಯದಲ್ಲಿ ಕಂಡುಬರುವ ಕುಷ್ಠರೋಗ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಿ ಗುಣಪಡಿಸಿದಾಗ ಕುಷ್ಠಮುಕ್ತ ಸಮಾಜ ನಿರ್ಮಾಣಸಾಧ್ಯ ಎಂದು ತಿಳಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಭರತ್ ಕುಷ್ಠರೋಗ ಕುರಿತಾದ ಪ್ರತಿಜ್ಞಾವಿಧಿ ಭೋದಿಸಿದರು. ಎಲ್ಲಾ ಎನ್.ಎಸ್.ಎಸ್ ವಿದ್ಯಾರ್ಥಿಗಳು, ಮಾರ್ಗದರ್ಶಕರು, ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ ಸಂಯೋಜಕ ಡಾ.ರವೀಶ್ ಬಿ ನಿರೂಪಿಸಿದರು. ಪ್ಯಾರಾ ಮೆಡಿಕಲ್ ವರ್ಕರ್ ರಾಜು ವಂದಿಸಿದರು.




By
ForthFocus™