ಶಂಕರನಾರಾಯಣ, ಮಾ.7: ರಾಜಕೀಯವು ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ. ರಾಜಕೀಯ ವಿಜ್ಞಾನದ ಅಧ್ಯಯನವು ಜನರಲ್ಲಿ ನಾಗರಿಕ ಪ್ರಜ್ಞೆ ಹೆಚ್ಚಿಸುತ್ತದೆ. ಆದ್ದರಿಂದ ರಾಜಕೀಯ ವಿಜ್ಞಾನದ ಅಧ್ಯಯನವು ಇಂದಿನ ಅಗತ್ಯ ಎಂದು ಶಂಕರನಾರಾಯಣ ಪದವಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಮತ್ತು ಸಿದ್ದಾಪುರದ ಗಿರಿಜಾ ಸಿಲ್ಕ್ಸ್ ಮಾಲಕ ಶ್ರೀನಾಥ್ ಪೈ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಶಾಸ್ತ್ರ ಪಠ್ಯ ವಿಷಯವಾದ “ರಾಜಕೀಯ-ಸಮಾಜ-ಆರ್ಥಿಕತೆ” ಎಂಬ ವಿಷಯದ ಕುರಿತು ನಡೆದ ಒಂದು ದಿನದ ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ವಿದ್ಯಾರ್ಥಿಗಳ ಸಮಗ್ರ ಅರಿವಿಗೆ ರಾಜಕೀಯ, ಸಮಾಜ ಮತ್ತು ಆರ್ಥಿಕತೆಯ ಪರಸ್ಪರ ಸಂಬಂಧಗಳನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವೆಂದು ಹೇಳಿದರು. ಶ್ರೀ ಶಾರದಾ ಪದವಿಪೂರ್ವ ಕಾಲೇಜು ಬಸ್ರೂರು ನಿವೃತ್ತ ಪ್ರಾಂಶುಪಾಲ ಡಾ. ದಿನೇಶ್ ಹೆಗಡೆ ಅವರು ದಿಕ್ಸೂಚಿ ಭಾಷಣದಲ್ಲಿ ಸಮಾಜದಲ್ಲಿ ರಾಜಕೀಯ ವ್ಯವಸ್ಥೆ ಮತ್ತು ಆರ್ಥಿಕ ವ್ಯವಸ್ಥೆಗಳು ಹೇಗೆ ಪರಸ್ಪರ ಪ್ರಭಾವ ಬೀರುತ್ತವೆ ಎಂಬುದನ್ನು ವಿವರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷೆ ಡಾ. ಜಯಶ್ರೀ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿಗೆ ಕೊಡುಗೆ ನೀಡಿದ ಶ್ರೀನಾಥ ಪೈ ಅವರನ್ನು ಸನ್ಮಾನಿಸಲಾಯಿತು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ಪ್ರಸ್ತುತ ವೈ ಎನ್ ಸ್ವಾಗತಿಸಿ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ರಮೇಶ್ ವಂದಿಸಿದರು. ಪ್ರಥಮ ಬಿ.ಎ ವಿದ್ಯಾರ್ಥಿನಿ ಭಾವನ ಮತ್ತು ತಂಡದವರು ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪಾಂಡುರಂಗ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ವಿವಿಧ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರು ಮತ್ತು ವಿಷಯ ತಜ್ಞರು ಭಾಗವಹಿಸಿದ್ದರು.




By
ForthFocus™