ಕುಂದಾಪುರ, ಏ.2: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್ ಹಾಗೂ ಭಂಡಾರಕರ್ಸ್ ಕಾಲೇಜು ಕುಂದಾಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಇಲ್ಲಿನ ಭಂಡಾರಕರ್ಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ಯೋಗ ಮೇಳಕ್ಕೆ ಆಗಮಿಸಿದ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಯುವಜನತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಇಂತಹ ಮೇಳಗಳು ಸಹಕಾರಿ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಉತ್ಪಾದನೆ, ಕೃಷಿ, ಐಟಿ, ಹಣಕಾಸು, ತಂತ್ರಜ್ಞಾನ ಹಾಗೂ ಕೈಗಾರಿಕೆ ಸೇರಿದಂತೆ 20 ಕ್ಕೂ ಹೆಚ್ಚು ವಿವಿಧ ವಲಯಗಳ 84 ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು.
ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸುಮಾರು 3000 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ವಿವಿಧ ಕಂಪನಿಗಳು ನಡೆಸಿದ ಸಂದರ್ಶನದ ಮೂಲಕ ಒಟ್ಟು 1,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.




By
ForthFocus™