Thursday, April 16, 2026
Thursday, April 16, 2026

ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ಸೂಚನೆಗಳು

ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ಸೂಚನೆಗಳು

Date:

ಉಡುಪಿ, ಏ.16: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3 ರ ವರೆಗೆ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು.

ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓ.ಆರ್.ಎಸ್ ಅನ್ನು ಬಳಸಬೇಕು. ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು. ಹೊರಗೆ ತೆರಳುವಾಗ ನೀರಿನ ಬಾಟೆಲ್, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಓ.ಆರ್.ಎಸ್ ಅನ್ನು ಒಂಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವಂತೆ ನಾಗರಿಕರನ್ನು ಪ್ರೋತ್ಸಾಹಿಸಬೇಕು. ನಾಗರಿಕರು ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ: ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ಆರೋಗ್ಯದ ಮೇಲೆ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓ.ಆರ್.ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡಲ್ಲಿ ಅಥವಾ ದೀರ್ಘಕಾಲದವರೆಗೆ ಇದ್ದಲ್ಲಿ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಈ ಸಂದರ್ಭದಲ್ಲಿ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಅತೀ ಹೆಚ್ಚು ತಾಪಮಾನದಿಂದ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್

ಅಹಮದಾಬಾದ್, ಏ.16: ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ನೌಕೆ ಎಂವಿ ಜಗ್...

ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಏ.16: ಏ. 16 ಗುರುವಾರ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ,...

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ...
error: Content is protected !!