ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು ಜಗತ್ತಿನಾದ್ಯಂತ ಪರಿಸರದ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುವ ಮಹತ್ವದ ವೇದಿಕೆಯಾಗಿದೆ. ಮಾನವ ತನ್ನ ಅನುಕೂಲಕ್ಕೆ ತಕ್ಕಂತೆ ಪರಿಸರವನ್ನು ಮಿತಿ ಮೀರಿ ಬಳಸಿಕೊಂಡ ಕಾರಣಕ್ಕೆ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇತರ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗುತ್ತಿದ್ದು ಪರಿಸರ ಸಮತೋಲನ ಹದಗೆಡುತ್ತಿದೆ. ವಿದ್ಯಾರ್ಥಿಗಳಾದ ನೀವು ಜವಾಬ್ದಾರಿಯನ್ನು ವಹಿಸಿಕೊಂಡು, ಸಸಿ ನೆಟ್ಟು ಪೋಷಿಸಬೇಕು, ಪರಿಸರ ಸ್ವಚ್ಛತೆಯನ್ನು ಕಾಪಾಡಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ ಗಾಂವಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಕಾಲೇಜಿನಲ್ಲಿ ಐಕ್ಯುಎಸಿ, ಅಭ್ಯದಯ ಸಮಾಜಕಾರ್ಯ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು. ಮತ್ತು ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿನ ಪ್ರಾಂಶುಪಾಲ ಡಾ.ಸೋಜನ್ ಕೆ ಜಿ, ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಟಿ., ರುಖಿಯತ್, ಐಕ್ಯುಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರಸಾದ್ ಎಚ್.ಎಂ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾಜಕಾರ್ಯ ವಿಭಾಗದ ಉಪನ್ಯಾಸಕರಾದ ಡಾ. ಗಣೇಶ್ ಪ್ರಸಾದ್ ಜಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.




By
ForthFocus™