ಕೋಟ, ಜೂ.27: ಪಂಚವರ್ಣ ಸಂಘಟನೆಯಿಂದ ರೈತ ಪರಿಸರ ಸ್ನೇಹಿ ಕಾರ್ಯಕ್ರಮಗಳು ಜನಮನ್ನಣೆ ಗಳಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಶುಕ್ರವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ 55ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ 55ನೇ ರೈತ ಪುರಸ್ಕಾರವನ್ನು ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರಿಗೆ ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು.
ಪರಿಸರಸ್ನೇಹಿ ಹಸಿರು ಗಿಡವನ್ನು ನೆಟ್ಟು, ಗೋ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ರೈತ ಪುರಸ್ಕಾರವನ್ನು ಸಕಡ್ ಫೌಂಡೇಶನ್ ಮುಖ್ಯಸ್ಥ ಕೋಟ ಶ್ರೀಕಾಂತ್ ಶೆಣೈ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.
ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಸದಸ್ಯರಾದ ಪ್ರಭಾಕರ್ ಮಣೂರು ನಿರೂಪಿಸಿದರು. ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.




By
ForthFocus™