ಕಾರ್ಕಳ, ಆ.15: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸದಾಶಿವ ಪ್ರಭು ಮಾಜಿ ಸೈನಿಕರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವನ ಮಾಡುತ್ತಿದ್ದೇವೆಂದರೆ ಅದಕ್ಕೆ ಸಾವಿರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದಾಗಿ. ಇಂದಿನ ಪೀಳಿಗೆಯು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ದೇಶದ ಪ್ರಗತಿಗೆ ಕೊಡುಗೆಯನ್ನು ನೀಡಬೇಕು ಆಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಕ್ಕೆ ನ್ಯಾಯವನ್ನು ಒದಗಿಸಿದಂತಾಗುತ್ತದೆ.

ಗಡಿ ಕಾಯುವ ಸೈನಿಕನಿಂದಾಗಿ ನಾವೆಲ್ಲರೂ ಈ ದೇಶದಲ್ಲಿ ಸುರಕ್ಷಿತವಾಗಿ ಜೀವನ ನಡೆಸಲು ಸಾಧ್ಯ. ಪ್ರಾಮಾಣಿಕ,ನಿಷ್ಠೆ, ಶಿಸ್ತು ಮತ್ತು ಶ್ರದ್ಧೆಯಿಂದ ದುಡಿದು ತಮ್ಮದೇ ಕ್ಷೇತ್ರದಲ್ಲಿ ಕೊಡುಗೆಗಳನ್ನು ನೀಡುವುದರ ಮೂಲಕ ಸ್ವಾತಂತ್ರ್ಯದ ಆಶೋತ್ತರಗಳನ್ನು ಈಡೇರಿಸಬೇಕು. ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಸಾಮಾಜಿಕ ಮಾಧ್ಯಮಗಳನ್ನು ಧನಾತ್ಮಕವಾಗಿ ಬಳಸಿಕೊಂಡಾಗ ಈ ದೇಶವು ಇನ್ನು ಹೆಚ್ಚಿನ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್. ಎಲ್.. ಆದರ್ಶ ಎಂ.ಕೆ.. ಗಣಪತಿ ಭಟ್ ಕೆ. ಎಸ್.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ನಡೆಸಿಕೊಟ್ಟರು.
ಉಪನ್ಯಾಸಕ ವರ್ಗ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಕರಾವಳಿಯ ಪ್ರಸಿದ್ಧ ಗಾಯಕರಿಂದ ದೇಶಭಕ್ತಿಯನ್ನು ಪಸರಿಸುವ ಕ್ರಿಯೇಟಿವ್ ಸವಿಗಾನ ಸಂಗೀತ ಕಾರ್ಯಕ್ರಮ ನೆರವೇರಿತು.




By
ForthFocus™