ಕಾಪು, ಆ.27: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು, ಉಡುಪಿ ಇಲ್ಲಿ ಬುಧವಾರದಂದು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ, ಪುಸ್ತಕ ಪ್ರದರ್ಶನ ಹಾಗೂ ‘ಓದಿನಿಂದ ವ್ಯಕ್ತಿತ್ವ ವಿಕಸನ’ ವಿಷಯ ಕುರಿತ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಸಹ ಪ್ರಾಧ್ಯಾಪಕ ಶ್ರೇಣಿಯ ಗ್ರಂಥಪಾಲಕರಾದ ರಾಮ ಕೆ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಲಭ್ಯವಿರುವ ಮುದ್ರಿತ ಹಾಗೂ ಡಿಜಿಟಲ್ ಪುಸ್ತಕಗಳನ್ನು ನಿರಂತರವಾಗಿ ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉತ್ತಮ ಓದುವ ಹವ್ಯಾಸವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ ಎಂ ಗಾಂವ್ಕರ್ ವಹಿಸಿ ಕಾಲೇಜಿನಲ್ಲಿ ಸಿಗುವ ಎಲ್ಲಾ ಸವಲತ್ತುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಕರೆ ನೀಡಿದರು. ಐಕ್ಯೂಎಸಿ ಸಂಚಾಲಕಿ ಡಾ. ರೋಶ್ನಿ ಯಶವಂತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ಗ್ರಂಥಪಾಲಕರಾದ ಪ್ರೊ. ಯಶೋಧಾ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾಲೇಜಿನ ಗ್ರಂಥಾಲಯದಲ್ಲಿ ವಿಶೇಷ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆಸಕ್ತಿಯಿಂದ ವೀಕ್ಷಿಸಿದರು.
ವಿದ್ಯಾರ್ಥಿಗಳಾದ ಶ್ರೇಯ ಕಾರ್ಯಕ್ರಮ ನಿರೂಪಿಸಿದರು, ಪ್ರೀತಿ ಮತ್ತು ಬಳಗದವರು ಪ್ರಾರ್ಥಿಸಿದರು, ನಿಧಿ ಅತಿಥಿಯನ್ನು ಪರಿಚಯಿಸಿದರು. ರೇಷ್ಮಾ ವಂದಿಸಿದರು. ಕಾಲೇಜಿನ ಎಲ್ಲಾ ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.




By
ForthFocus™