Thursday, September 17, 2026
Thursday, September 17, 2026

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆ – ತೀರ್ಥಹಳ್ಳಿವರೆಗಿನ ಕಾಮಗಾರಿ ಜಿಲ್ಲೆಯಲ್ಲಿ ಅಂತಿಮ ಹಂತದಲ್ಲಿದೆ. ಆದರೆ ಕಾಮಗಾರಿ ನಡೆಯುತ್ತಿರುವ ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಭೂ ಸ್ವಾಧೀನ ಕಾರ್ಯಗಳನ್ನು ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು. ಭೂ ಮಾಲೀಕರಿಗೆ ವೈಜ್ಞಾನಿಕವಾಗಿ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿರುವುದು ಸರಿಯಲ್ಲ. ಪದೇ ಪದೇ ಸಭೆ ಕರೆದು ಸಮಸ್ಯೆ ಬಗ್ಗೆ ಚರ್ಚಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಾಗುತ್ತಿರುವುದು ಸರಿಯಲ್ಲ ಎಂದರು. ನೆನೆಗುದಿಗೆ ಬಿದ್ದಿರುವ ಪರ್ಕಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿ 8.25 ಕೋಟಿ ರೂ. ಅನ್ನು ಕೋರ್ಟ್ಗೆ ಜಮಾ ಮಾಡಲಾಗಿದೆ. 13 ಜನರಿಗೆ ಸಂಬಂಧಿಸಿದ 419 ಮೀ ನಲ್ಲಿ ಒಬ್ಬರು ಮಾತ್ರ ಕೋರ್ಟ್ಗೆ ಹೋಗಿದ್ದು, ಈ ಬಗ್ಗೆ ಮರು ಸರ್ವೆ ಮಾಡಿ ಸಮಸ್ಯೆ ಇತ್ಯರ್ಥಗೊಳಿಸಿ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಿದರು.

ಹಿರಿಯಡ್ಕದಿಂದ ಪೆರ್ಡೂರು ವರೆಗೆ ಬಾಕಿ ಇದ್ದ 2.69 ಕಿಲೋ ಮೀಟರ್ ಸ್ವಾಧೀನವಾಗಿದೆ. ಹೆಬ್ರಿ ಪಾಡಿಗಾರ ಪ್ರದೇಶದಲ್ಲಿ 1.4 ಕಿ.ಮೀ ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ಮರ ಕಡಿಯಲು ಅನುಮತಿ ನೀಡಲಾಗಿದೆ ಆದರೆ ಮರ ತೆರವು ಕಾರ್ಯ ಬಾಕಿ ಇದೆ. ಮರಗಳ ತೆರವು ಕಾರ್ಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪೂರ್ಣಗೊಳಿಸಬೇಕೆಂದು ದೂರವಾಣಿ ಮೂಲಕ ಸೂಚನೆ ನೀಡಿದರು. ಹೆಬ್ರಿಯಿಂದ ಆಗುಂಬೆ ಘಾಟಿವರೆಗೆ ಕಾಮಗಾರಿಗೆ 72 ಕೋಟಿ ಬಿಡುಗಡೆ ಯಾಗಿದೆ. ಹೆಬ್ರಿ ಬಳಿಕ ಆಗುಂಬೆ ವರೆಗೆ ಕಾಮಗಾರಿಗೆ ಡಿ.ಪಿ.ಆರ್ ಅನ್ನು ತ್ವರಿತವಾಗಿ ತಯಾರಿಸಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಭೂ ಸ್ವಾಧೀನ ಆದ ಭೂ ಮಾಲೀಕರಿಗೆ ನೋಟಿಸ್ ನೀಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ. ವಿನಾಕಾರಣ ಕಾಮಗಾರಿಯಲ್ಲಿ ವಿಳಂಬ ತೋರಿಸಬಾರದು ಎಂದರು. ಕಲ್ಮಾಡಿಯಿಂದ ಮಲ್ಪೆ ಹಾರ್ಬರ್ ವರೆಗಿನ 1.18 ಕಿಲೋ ಮೀಟರ್ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಳೆಯಿಂದಲೇ ಕಾಮಗಾರಿ ಪ್ರಾರಂಭಿಸಬೇಕೆಂದು ಅಭಿಯಂತರರಿಗೆ ಸೂಚನೆ ನೀಡಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಾ. ಹೆದ್ದಾರಿಯಲ್ಲಿ ಜಾಗ ಕಳೆದುಕೊಂಡಿರುವ ಮತ್ತು ಪರಿಹಾರ ಧನ ಪಾವತಿಸಲು ಬಾಕಿ ಇರುವವರ ಪಟ್ಟಿ ತಯಾರಿಸಿ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅವರ ಜೊತೆ ಚರ್ಚಿಸಿ ಸಮಸ್ಯೆ ಪರಿಹರಿಸಲು ತಿಳಿಸಿದರು. ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಶೃಂಗೇರಿ- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...
error: Content is protected !!