ಬೆಂಗಳೂರು, ಮಾ.16: ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,
ನಿಗಮಕ್ಕೆ ಒಟ್ಟು 805 ಸಂಖ್ಯೆಯ ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ/ಗ್ರಾಮಾಂತರ ಸಾರಿಗೆ ವಾಹನಗಳು ಏಪ್ರಿಲ್, ಮೇ & ಜೂನ್-2026 ಮಾಹೆಗಳಲ್ಲಿ ಸೇರ್ಪಡೆಗೊಳ್ಳಲಿದೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ನೀಡಿರುವ ಮಹತ್ವದ ಕೊಡುಗೆಗಳನ್ನು ಸ್ಮರಿಸುವುದು ಮತ್ತು ಅವರ ಹಕ್ಕುಗಳು, ಸಮಾನತೆ ಹಾಗೂ ಗೌರವವನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ.
ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.
ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 1.04 ಲಕ್ಷ ಸಿಬ್ಬಂದಿಗಳಿದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254-ತಾಂತ್ರಿಕ ಸಿಬ್ಬಂದಿಗಳು, 3535-ಆಡಳಿತ ಸಿಬ್ಬಂದಿಗಳಾಗಿರುತ್ತಾರೆ.
“ಶಕ್ತಿ ಯೋಜನೆ” ಯಲ್ಲಿ ಮಹಿಳೆಯರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದ್ದು, ದಿನಾಂಕ: 12ನೇ ಮಾರ್ಚ್ 2026ಕ್ಕೆ 688.83 ಕೋಟಿ ಮಹಿಳೆಯರು ಪ್ರಯಾಣಿಸಿರುತ್ತಾರೆ.
ಇದೇ ಸಂದರ್ಭದಲ್ಲಿ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿಗಳು ಪ್ರಶಸ್ತಿಯನ್ನು ಸ್ವೀಕರಿಸಿರುವುದು ಗೌರವದ ವಿಷಯ.
ಪಲ್ಲಕ್ಕಿ ಬಸ್ಸುಗಳನ್ನು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಪದ್ಮಶ್ರೀ ಪುರಸ್ಕೃತರಾದ ಡಾ. ಶುಭ ವಿ., ಅಕ್ರಂ ಪಾಷ, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಗಾಯಿತ್ರಿ ಕೆ.ಎಂ. ಭಾಆಸೇ., ಡಾ ಲತಾ, ಕರಾರಸಾ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.




By
ForthFocus™