ಮುಂಬಯಿ, ಜು.13: ಮಹಾರಾಷ್ಟ್ರದಾದ್ಯಂತ ಅಡಿಕೆ ಸಾಗಣೆ ವಾಹನಗಳನ್ನು ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ ತಡೆಹಿಡಿಯಲಾಗಿದೆ. ಇದರಿಂದಾಗಿ ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಬೇಕಿದ್ದ ನಮ್ಮ ರೈತರ ಅಡಿಕೆ ಬೆಳೆ ಹಾನಿಗೊಳಗಾಗಿ, ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ.
ಕರ್ನಾಟಕದ ಪ್ರಮುಖ ಅಡಿಕೆ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಮಾಮ್ಕೋಸ್, ಟುಮ್ಕೋಸ್ ಹಾಗೂ ರಾಜ್ಯ ಅಡಿಕೆ ಸಹಕಾರಿ ಮಹಾಮಂಡಳದ ನಿಯೋಗ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಭೇಟಿಯಾಗಿ ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ವಿನಂತಿಸಿದೆ.
ರೈತರ ಹಿತರಕ್ಷಣೆಗೆ ಧಾವಿಸಿ, ಈ ಗಂಭೀರ ಸಮಸ್ಯೆಯ ಕುರಿತು ತಕ್ಷಣವೇ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೊಂದಿಗೆ ನಿಯೋಗ ಚರ್ಚೆ ನಡೆಸಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಫಡ್ನವೀಸ್ ಅವರು, ತಡೆಹಿಡಿಯಲಾಗಿರುವ ಅಡಿಕೆ ಸರಕನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಸಾಗಣೆಗೆ ಯಾವುದೇ ಅಡ್ಡಿಯಾಗದಂತೆ ಅಗತ್ಯವಿರುವ ಎಲ್ಲಾ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿದ್ದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡುತ್ತಾ, ಅಡಿಕೆ ಬೆಳೆಗಾರರ ಬೆನ್ನಿಗೆ ಸದಾ ನಿಲ್ಲುವ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಹಾಗೂ ಕರಾವಳಿ ಮಲೆನಾಡು ರೈತರ ಪಾಲಿಗೆ ನೆರವಾದ ಸನ್ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರಿಗೆ ರಾಜ್ಯದ ಸಮಸ್ತ ರೈತ ಬಾಂಧವರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. ಸಂಸದರಾದ ಬಿ. ವೈ. ರಾಘವೇಂದ್ರ, ಮಾಜಿ ಸಚಿವರು ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.




By
ForthFocus™