ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಸುಮಾರು 700 ವರ್ಷಗಳ ಇತಿಹಾಸವಿರುವ ಶ್ರೀಮಠದ ಪೀಠಾಧ್ಯಕ್ಷರಾಗಿ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳವರು ಸಲ್ಲಿಸಿದ ಸೇವೆ ಅಪಾರ. ಅನ್ನ, ಅಕ್ಷರ ಹಾಗೂ ಜ್ಞಾನ ಮೂರು ಬಗೆಯ ಸೇವೆಯನ್ನು ಒದಗಿಸಿ ಸಹಸ್ರಾರು ವಿದ್ಯಾರ್ಥಿಗಳ ಬಾಳಿಗೆ ಅವರು ದಿವ್ಯಜ್ಯೋತಿಯಾಗಿದ್ದರು.
ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಾಣುತ್ತಾ ಶ್ರೀ ಮಠದ ಸೇವೆಗಳನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಿದ ಸರಳತೆಯ ಸಾಕಾರಮೂರ್ತಿಯಾಗಿದ್ದ ಮಹಾಸ್ವಾಮಿಗಳು ನಮ್ಮನ್ನು ದೈಹಿಕವಾಗಿ ಅಗಲಿದ್ದರೂ, ಅವರ ಬೋಧನೆಗಳು ಹಾಗೂ ಆದರ್ಶಗಳು ನಮ್ಮೆಲ್ಲರಿಗೂ ಸದಾ ದಾರಿದೀಪವಾಗಿ ಮುನ್ನಡೆಸಲಿವೆ. ಶ್ರೀಗಳ ಆಶೀರ್ವಾದದಿಂದ ಅವರ ಹೆಜ್ಜೆ ಜಾಡಲ್ಲಿ ನಡೆಯಲು ನಾವೆಲ್ಲರೂ ಪ್ರಯತ್ನಿಸೋಣ ಹಾಗೂ ಶ್ರೀಮಠದ ಗೌರವವನ್ನು ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸೋಣ ಎಂದು ಸಿಎಂ ಕರೆ ನೀಡಿದರು.

ಮೈಸೂರಿನ ಸುತ್ತೂರು ಮಠದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ದೇಗುಲ ಮಠದ ಡಾ. ಚನ್ನಬಸವ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ವಿ. ಸೋಮಣ್ಣ, ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಮುಂತಾದವರು ಉಪಸ್ಥಿತರಿದ್ದರು.




By
ForthFocus™