ಹಾಸನ, ಅ.13: ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ ಮಾಡಲಾಗಿದೆ. ಸಾರಿಗೆ ಇಲಾಖೆಯಿಂದ ವಿವಿಧ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 2,300ಕ್ಕೂ ಹೆಚ್ಚು ಬಸ್ಗಳನ್ನು ದರ್ಶನೋತ್ಸವಕ್ಕೆ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
25 ಲಕ್ಷಕ್ಕೂ ಹೆಚ್ಚು ಭಕ್ತರು: ಹಾಸನಾಂಬ ದರ್ಶನೋತ್ಸವಕ್ಕೆ ಈ ಬಾರಿ 25 ಲಕ್ಷಕ್ಕೂ ಹೆಚ್ಚು ಮಂದಿ ಬರುವ ನಿರೀಕ್ಷೆ ಇದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ದೇವಿ ದರ್ಶನಕ್ಕೆ 80 ವರ್ಷಕ್ಕಿಂತ ಮೇಲಿನವರು ಹಾಗೂ ಅಂಗವಿಕಲರಿಗೆ ನೇರದರ್ಶನ ವ್ಯವಸ್ಥೆ ಮಾಡಲಾಗಿದೆ. ಗಂಟೆಗೆ 6 ಸಾವಿರ ಮಂದಿಯಂತೆ ಪ್ರತಿದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್ ರದ್ದುಪಡಿಸಿದ್ದು, ಶಿಷ್ಟಾಚಾರ ದರ್ಶನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರು ತಿಳಿಸಿದ್ದಾರೆ.




By
ForthFocus™