ಕೊಪ್ಪಳ, ಏ.10: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಿಟ್ ಹೌಸ್ ಕಟ್ಟಡದ ಶಂಕುಸ್ಥಾಪನೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ 2000 ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ಕೊಡುತ್ತೆವೆ, ಹಬ್ಬ-ಹರಿ ದಿನಗಳ ಸಂದರ್ಭ ಹಾಗೂ ಶಾಲಾ-ಕಾಲೇಜುಗಳ ಮಕ್ಕಳಿಗೆ ಹೊಸದಾಗಿ ಬಸ್ ಖರೀದಿಸುವುದರಿಂದ ಅವರು ದಿನಾಲೂ ಸಂಚಾರ ಮಾಡಲು ಅನುಕೂಲವಾಗುವುದರ ಜೊತೆಗೆ ಬಸ್ಸುಗಳ ಕೊರತೆ ನೀಗಿಸಿದಂತಾಗುತ್ತದೆ. ಯಲಬುರ್ಗಾ ಕ್ಷೇತ್ರದಲ್ಲಿ 16 ಬಸ್ ನಿಲ್ದಾಣಗಳನ್ನು ಕಟ್ಟುತ್ತಿದ್ದೆವೆ. ಬೇವೂರು ಹಾಗೂ ಹಿರೇವಂಕಲಕುಂಟಾ ನೂತನ ಬಸ್ ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಂಜನಾದ್ರಿಗೆ ಹಿಂದಿನ ಸರ್ಕಾರ 19 ಕೋಟಿ ರೂ. ಅನುದಾನ ನೀಡಿತ್ತು. ನಮ್ಮ ಸರ್ಕಾರ ಬಂದಮೇಲೆ 100 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರವಾಸಿ ಮಂದಿರ, ಶಾಫಿಂಗ್ ಕಾಂಪ್ಲೆಕ್ಸ್, ಪ್ರದಕ್ಷಿಣಾ ಪಥ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಲಿಸುವ ಮೂಲಕ ಆಂಜನೇಯ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ, ಸಂಸದರಾದ ರಾಜಶೇಖರ್ ಬಸವರಾಜ್ ಹಿಟ್ನಾಳ್, ಜಿಲ್ಲಾಧಿಕಾರಿ ನಲಿನ್ ಅತುಲ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವ್ಯವಸ್ಥಾಪಕ ನಿರ್ದೆಶಕರಾದ ರಾಚಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಂದಮ್ಮ ಗವಿಸಿದ್ದಪ್ಪ ಬಳಿಗಾರ, ಕಲಬುರಗಿ ಮುಖ್ಯ ಕಾಮಗಾರಿ ಅಭಿಯಂತರಾದ ಚನ್ನನ ಬೋರಯ್ಯ, ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಮ್.ವೆಂಕಟೇಶ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರಾದ ಹೇಮಂತ್, ಕೊಪ್ಪಳ ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ ಹಾಗೂ ಇತರರು ಉಪಸ್ಥಿತರಿದ್ದರು.




By
ForthFocus™