ನವದೆಹಲಿ, ಮೇ 7: ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕರು ವಾಸವಾಗಿದ್ದ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ. ಇದರಲ್ಲಿ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ಭದ್ರಕೋಟೆಗಳಾದ ಮುರಿಡ್ಕೆ ಮತ್ತು ಬಹಾವಲ್ಪುರ್ ಸೇರಿವೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮಧ್ಯರಾತ್ರಿ 1.05 ರಿಂದ 1.30 ನಡುವೆ ದಾಳಿ ನಡೆಸಲಾಯಿತು.
ಅಧಿಕೃತ ಹೇಳಿಕೆಯಲ್ಲಿ, ರಕ್ಷಣಾ ಸಚಿವಾಲಯವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದನ್ನು ದೃಢಪಡಿಸಿದೆ. ಈ ಪ್ರದೇಶದಿಂದಲೇ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗಿದೆ ಮತ್ತು ನಿರ್ದೇಶಿಸಲಾಗಿದೆ.
“ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಪರಿಣಾಮಕಾರಿ ನಾಗರಿಕ ರಕ್ಷಣೆ”ಗಾಗಿ ದೇಶಾದ್ಯಂತ 244 ಜಿಲ್ಲೆಗಳಲ್ಲಿ ಯೋಜಿತ ಭದ್ರತಾ ಅಣಕು ಕವಾಯತು ನಡೆಸುವ ಕೆಲವೇ ಗಂಟೆಗಳ ಮೊದಲು ಭಾರತದ ದಾಳಿಗಳು ನಡೆದಿವೆ.
ಆಪರೇಷನ್ ಸಿಂದೂರ್ ಹೇಗಿತ್ತು? 1971 ರ ಯುದ್ಧದ ನಂತರದ ಮೊದಲ ಸಂಯೋಜಿತ ತ್ರಿ-ಸರಣಿ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಮಧ್ಯರಾತ್ರಿ 1.05 ರಿಂದ 1.30 ನಡುವೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಈ ಸಂಪೂರ್ಣ ದಾಳಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಾಚರಣೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಕೇವಲ 25 ನಿಮಿಷಗಳ ಕಾಲ ನಡೆದ ಆಪರೇಷನ್ ಸಿಂಧೂರ್ ನಲ್ಲಿ 9 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿ ಕನಿಷ್ಠ 70 ಉಗ್ರರನ್ನು ಹೊಡೆದುರುಳಿಸಲಾಗಿದೆ. ಮಧ್ಯರಾತ್ರಿ 1.05 ರಿಂದ 1.30 ನಡುವೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತಯ್ಬಾ, (ಎಲ್.ಇ.ಟಿ), ಜೈಶ್-ಇ-ಮೊಹಮ್ಮದ್ (ಜೆ.ಇ.ಎಂ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ನೆಲೆಗಳ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಧ್ವಂಸಗೊಳಿಸಲಾಗಿದೆ ಎಂದು ಕೊಲೊನೆಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾಹಿತಿ ನೀಡಿದರು.




By
ForthFocus™